ADVERTISEMENT

6.64 ಲಕ್ಷ ಹೆಕ್ಟೇರ್ ಡೀಮ್ಡ್‌ ಅರಣ್ಯ ಕಂದಾಯ ಇಲಾಖೆಗೆ: ಅರಣ್ಯ ಸಚಿವ ಉಮೇಶ್ ಕತ್ತಿ

​ಪ್ರಜಾವಾಣಿ ವಾರ್ತೆ
Published 7 ಮೇ 2022, 8:45 IST
Last Updated 7 ಮೇ 2022, 8:45 IST
ಉಮೇಶ್ ಕತ್ತಿ
ಉಮೇಶ್ ಕತ್ತಿ    

ಉಡುಪಿ: ರಾಜ್ಯದಲ್ಲಿರುವ 9.94 ಲಕ್ಷ ಹೆಕ್ಟೇರ್ ಡೀಮ್ಡ್‌ ಅರಣ್ಯ ಪ್ರದೇಶದಲ್ಲಿ 3.30 ಲಕ್ಷ ಹೆಕ್ಟೇರ್ ಭೂಮಿಯನ್ನು ಇಲಾಖೆಗೆ ಸೇರಿಸಿಕೊಂಡು, ಉಳಿದ 6.64 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು.

ಶನಿವಾರ ಬ್ರಹ್ಮಾವರದ ನೀಲಾವರದಲ್ಲಿ ಸ್ಮೃತಿವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ಹಿಂದಿನ ಎಸ್‌.ಎಂ.ಕೃಷ್ಣ ಸರ್ಕಾರ ರಾಜ್ಯದಲ್ಲಿ 9.94 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್‌ ಅರಣ್ಯ ಎಂದು ಘೋಷಿಸಿತ್ತು. ಈ ಪ್ರದೇಶದಲ್ಲಿ ದಶಕಗಳಿಂದ ಸಾವಿರಾರು ರೈತರು ಕೃಷಿ ಮಾಡುತ್ತಿದ್ದು, ಮನೆಗಳನ್ನು ಕಟ್ಟಿಕೊಂಡಿರುವುದರಿಂದ ರಾಜ್ಯದಲ್ಲಿರುವ ಡೀಮ್ಡ್‌ ಅರಣ್ಯ ವ್ಯಾಪ್ತಿ ಹಾಗೂ ಕಂದಾಯ ಇಲಾಖೆಗೆ ಸೇರಬೇಕಾದ ಭೂಮಿಯನ್ನು ಗುರುತಿಸಿ ಅಧಿಕಾರಿಗಳು ಸುಪ್ರೀಕೋರ್ಟ್‌ಗೆ ವರದಿ ಸಲ್ಲಿಸಿದ್ದರು.

ಅದರಂತೆ, 6.64 ಹೆಕ್ಟೇರ್ ಪ್ರದೇಶವನ್ನು ಡೀಮ್ಡ್‌ ಅರಣ್ಯ ವ್ಯಾಪ್ತಿಯಿಂದ ಕೈಬಿಟ್ಟು ಕಂದಾಯ ಇಲಾಖೆಗೆ ಸೇರಿಸಲಾಗಿದೆ. ಈ ಭೂಮಿಯನ್ನು ಮುಂದೆ ಅರ್ಹರಿಗೆ ಹಂಚಿಕೆ ಮಾಡಲಾಗುವುದು ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದರು.

ADVERTISEMENT

ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸೀಟು ಗೆಲ್ಲುವ ಗುರಿ ಇದೆ. ಮೈಸೂರು ಭಾಗದಲ್ಲಿ ರಾಜಕೀಯ ಪರಿವರ್ತನೆಯಾಗುತ್ತಿದ್ದು, ಬಿಜೆಪಿಯತ್ತ ವಾಲುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಮುಖ್ಯಮಂತ್ರಿ ಮಾಡುವುದಾಗಿ, ಮಂತ್ರಿ ಮಾಡುವುದಾಗಿ ಆಮಿಷವೊಡ್ಡುವವರು ಬಹಳಷ್ಟು ಮಂದಿ ಇದ್ದಾರೆ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡು ಈಚೆಗೆ ಬಸನಗೌಡ ಪಾಟೀಲ ಯತ್ನಾಳ್‌ ₹ 2,500 ಕೋಟಿ ಆರೋಪ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪೊಲೀಸ್ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರ ಹಾಗೂ ಯತ್ನಾಳ್ ₹ 2,500 ಕೋಟಿ ಹೇಳಿಕೆಯ ಬಗ್ಗೆ ತನಿಖೆಗೆ ಒತ್ತಾಯಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.