
ಉಡುಪಿ: ಮಹಾಶಿವರಾತ್ರಿ ಅಂಗವಾಗಿ ಜಿಲ್ಲೆಯಾದ್ಯಂತ ಶಿವದೇಗುಲಗಳಿಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಭಾನುವಾರ ಭೇಟಿ ನೀಡಿದರು.
ಶಿವ ದೇವಸ್ಥಾನಗಳನ್ನು ಹೂವು, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಭಾನುವಾರ ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಬನ್ನಂಜೆಯ ಮಹಾಲಿಂಗೇಶ್ವರ, ಹೆರ್ಗದ ತ್ರಯಂಬಕೇಶ್ವರ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಿತು. ಉಡುಪಿಯ ಅನಂತೇಶ್ವರ ದೇವಸ್ಥಾನದಲ್ಲಿ ಉತ್ಸವ ಪ್ರಯುಕ್ತ ಧ್ವಜಾರೋಹಣ ಸಮಾರಂಭ ಸಾಂಪ್ರದಾಯಿಕವಾಗಿ ನೆರವೇರಿತು.
ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಶ್ರೀಕೃಷ್ಣನಿಗೆ ಶಿವರಾತ್ರಿ ಪ್ರಯುಕ್ತ ವಿಶೇಷ ಹರಿ ಹರ ಅಲಂಕಾರ ಮಾಡಿದ್ದರು. ರಾಜಾಂಗಣದಲ್ಲಿ ಜಾಗರಣೆ, ಭಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.
ಬನ್ನಂಜೆಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಉತ್ಸವ ಬಲಿ, ರಥೋತ್ಸವ ಜರುಗಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.