
ನರಸಿಂಹರಾಜಪುರ: ಬೇರೆ ರಾಜ್ಯಗಳಿಂದ ವಲಸೆ ಬಂದ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಹಶೀಲ್ದಾರ್ ನೂರಲ್ ಹುದಾ ಸೂಚಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬಾಲಕಾರ್ಮಿಕ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಫಿ ತೋಟ, ಅಡಿಕೆ ತೋಟ, ಇತರ ಕೆಲಸಗಳಿಗೆ ಬೇರೆ ರಾಜ್ಯಗಳಿಂದ ಕಾರ್ಮಿಕರು ವಲಸೆ ಬರುತ್ತಿದ್ದಾರೆ. ಕಾರ್ಮಿಕ ಕುಟುಂಬದವರ ಜೊತೆ ಬಂದ ಮಕ್ಕಳ ಆರೋಗ್ಯ, ಶಿಕ್ಷಣದ ಬಗ್ಗೆ ತೋಟದ ಮಾಲೀಕರು ಗಮನ ನೀಡಬೇಕು. ಅವರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಜವಬ್ದಾರಿಯನ್ನು ಮಾಲೀಕರೇ ವಹಿಸಿಕೊಳ್ಳಬೇಕು. 18 ವರ್ಷ ವಯಸ್ಸಿನ ಒಳಗಿನ ಮಕ್ಕಳಿಂದ ಕೆಲಸ ಮಾಡಿಸಬಾರದು. ಅಂತಹ ಪ್ರಕರಣ ಕಂಡುಬಂದರೆ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ತೋಟಗಳ ಮಾಲೀಕರು ವಲಸೆ ಬಂದ ಮಕ್ಕಳ ದಾಖಲಾತಿ ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲಾಧಿಕಾರಿ ಅವರು ತಹಶೀಲ್ದಾರ್ ಅಧ್ಯಕ್ಷತೆಯ ತಾಲ್ಲೂಕು ಟಾಸ್ಕ್ ಪೋರ್ಸ್ ಸಮಿತಿ ರಚಿಸಿದ್ದಾರೆ. ತಾಲ್ಲೂಕಿನ 12 ಅಧಿಕಾರಿಗಳು ಸದಸ್ಯರಾಗಿದ್ದಾರೆ. ಶಿಕ್ಷಣ ಇಲಾಖೆ, ಸಿ.ಡಿ.ಪಿ.ಒ ಇಲಾಖೆ ಅಧಿಕಾರಿಗಳು ವಲಸೆ ಬಂದ ಕುಟುಂಬ ಇರುವ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅವರು ಸೂಚಿಸಿದರು.
ಪೊಲೀಸ್, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಿ.ಡಿ.ಪಿ.ಇ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯ ಬಳಿಕ ತಹಶೀಲ್ದಾರ್ ಸೂಚನೆಯಂತೆ ಅಧಿಕಾರಿಗಳ ತಂಡ ಎಸ್ಟೇಟ್ಗಳಿಗೆ ತೆರಳಿ ಪರಿಶೀಲನೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.