ಪಡುಬಿದ್ರಿ: ನಂದಿಕೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಂ11 ಎನರ್ಜಿ ಟ್ರಾನ್ಸಿಶನ್ ಪ್ರೈವೇಟ್ ಲಿಮಿಟೆಡ್ನ ಸಿಎಸ್ಆರ್ ನಿಧಿಯಿಂದ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ₹5 ಲಕ್ಷ ವೆಚ್ಚದಲ್ಲಿ ಅತ್ಯಾಧುನಿಕ ಯಂತ್ರ ಹಸ್ತಾಂತರಿಸಲಾಯಿತು.
ಲಿಪಿಡ್ ಫಂಕ್ಷನ್ ಟೆಸ್ಟ್ ಮತ್ತು ರಿನಲ್ ಫಂಕ್ಷನ್ ಟೆಸ್ಟ್ ಯಂತ್ರ, ಏರ್ ಕಂಡೀಷನರ್ನ್ನು ತಾಲ್ಲೂಕು ವೈದ್ಯಾಧಿಕಾರಿ ವಾಸುದೇವ ಉಪಾಧ್ಯಾಯ ಹಾಗೂ ಪಡುಬಿದ್ರಿ ಪ್ರಾಥಮಿಕ ಆರೋಗ್ಯಾಧಿಕಾರಿ ರಾಜೇಶ್ರೀ ಕಿಣಿ ಅವರಿಗೆ ಹಸ್ತಾಂತರಿಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಮಧು ಎಸ್. ರೈ ಮಾತನಾಡಿ, ‘ಸಂಸ್ಥೆಯು ಶಿಕ್ಷಣ, ಆರೋಗ್ಯ ಮತ್ತು ಸಮುದಾಯ ಅಭಿವೃದ್ಧಿ ಕ್ಷೇತ್ರಕ್ಕೆ ಒತ್ತು ನೀಡುತ್ತಿದ್ದು, ಈ ಭಾಗದ ಜನರ ಸೇವೆಗಾಗಿ ಆರೋಗ್ಯ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿಯ ಮೂಲಕ ಯಂತ್ರ ವಿತರಿಸಲಾಗಿದೆ’ ಎಂದರು.
ಶಿಕ್ಷಣವು ಸಮಾಜ-ಸಮುದಾಯಗಳ ಪ್ರಗತಿಗೆ ಮತ್ತು ಅಭಿವೃದ್ಧಿ ಸಾಧನೆಯ ಮೂಲ ತಳಹದಿ ಎಂದು ನಂಬಿರುವ ಸಂಸ್ಥೆ ‘ಶಾಲೆಯನ್ನು ದತ್ತು ತೆಗೆದುಕೊಳ್ಳಿ’ ಕಾರ್ಯಕ್ರಮದ ಮೂಲಕ ಪಡುಬಿದ್ರಿ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೂ ದತ್ತು ತೆಗೆದುಕೊಂಡು ಮೂಲ ಸೌಕರ್ಯ ಕಲ್ಪಿಸುವ ನವೀಕರಿಸುವ ದಿಸೆಯಲ್ಲೂ ನೆರವಾಗಲಿದೆ ಎಂದು ನುಡಿದರು.
ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಗುರುಪ್ರಸಾದ್ ಪಡ್ಕೆ, ದೀಪಾ ಇದ್ದರು.
‘ಕಾಪು, ಪಡುಬಿದ್ರಿ ಆಸ್ಪತ್ರೆ ಮೇಲ್ದರ್ಜೆಗೆ’
ಪಡುಬಿದ್ರಿ: ಕಾಪು ಹಾಗೂ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಲಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ವಾಸುದೇವ ಉಪಾಧ್ಯಾಯ ಹೇಳಿದ್ದಾರೆ.
ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕಾಪು ತಾಲ್ಲೂಕಾಗಿದ್ದು, ಆಸ್ಪತ್ರೆ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಬೇಕಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಸಂದರ್ಶಿಸುತಿದ್ದು, ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲು ಬೇಡಿಕೆಗಳಿವೆ. ನಾಲ್ಕು ವರ್ಷಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ 5 ವರ್ಷಗಳ ಒಳಗಾಗಿ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.