ADVERTISEMENT

ಮೀನುಗಾರರ ಪತ್ತೆಗೆ ಕೇಂದ್ರ ಗೃಹ ಸಚಿವರಿಗೆ ಮನವಿ

ರಾಜನಾಥ್‌ ಸಿಂಗ್ ಅವರಿಗೆ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 15:55 IST
Last Updated 3 ಜನವರಿ 2019, 15:55 IST
ಮೀನುಗಾರರ ಪತ್ತೆಗೆ ಕೇಂದ್ರ ಸಚಿವ ಸದಾನಂದಗೌಡರ ನೇತೃತ್ವದಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು
ಮೀನುಗಾರರ ಪತ್ತೆಗೆ ಕೇಂದ್ರ ಸಚಿವ ಸದಾನಂದಗೌಡರ ನೇತೃತ್ವದಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು   

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಎಂಬ ಬೋಟ್‌ ಡಿ.15ರಂದು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ. ತಕ್ಷಣ ಮೀನುಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ಸದಾನಂದ ಗೌಡ ನೇತೃತ್ವದಲ್ಲಿ ಬಿಜೆಪಿ ನಾಯಕರು, ಮೀನುಗಾರ ಮುಖಂಡರು ಗುರುವಾರ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಬೋಟ್‌ ನಾಪತ್ತೆಯಿಂದಾಗಿ ಕರಾವಳಿ ಭಾಗದ ಮೀನುಗಾರರು ಆತಂಕದಲ್ಲಿದ್ದಾರೆ. ನಾಪತ್ತೆಯಾದ ಮೀನುಗಾರರ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ಕೂಡಲೇ ಬೋಟ್ ಪತ್ತೆಗೆ ಕ್ರಮತೆಗೆದುಕೊಳ್ಳುವಂತೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಸಚಿವರು ಬೋಟ್‌ ಪತ್ತೆಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ರಕ್ಷಣಾ ಕಾರ್ಯದರ್ಶಿಗೆ ಸೂಚನೆ ನೀಡಿದರು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ADVERTISEMENT

ನಿಯೋಗದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ದಕ್ಷಿಣಕನ್ನಡ ಮೊಗವೀರ ಮಹಾಜನಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್‌, ಯುವ ಸಂಘಟನೆ ಅಧ್ಯಕ್ಷ ವಿನಯ್ ಕರ್ಕೇರ, ರಾಜ್ಯ ಗಂಗಾಮನ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಶಿವಲಿಂಗಪ್ಪ, ರಾಘವೇಂದ್ರ ಹಾಗೂ ಮೊಗವೀರ ಸಮಾಜದ ಮುಖಂಡರು ಇದ್ದರು.

ಮತ್ತೊಂದೆಡೆ ಬುಧವಾರ ಸಂಸದೆ ಶೋಭಾ ಕರಂದ್ಲಾಜೆ ಕೂಡ ಗೃಹ ಸಚಿವ ರಾಜನಾತ್ ಸಿಂಗ್ ಅವರನ್ನ ಭೇಟಿ ಮಾಡಿ ಮೀನುಗಾರರ ಪತ್ತೆಗೆ ಮನವಿ ಸಲ್ಲಿಸಿದರು.

ಬೋಟ್‌ ಅನ್ನು ಕಡಲ್ಗಳ್ಳರು ಅಥವಾ ಭಯೋತ್ಪಾದಕರು ಅಪಹರಿಸಿರುವ ಸಾಧ್ಯತೆಗಳಿವೆ. ಮೀನುಗಾರರ ಕುಟುಂಬ ದಿಕ್ಕು ತೋಚದಂತಾಗಿದೆ. ಕರಾವಳಿಯಲ್ಲಿ ಮೀನುಗಾರಿಕೆ ಬಹುತೇಕ ಸ್ಥಗಿತಗೊಂಡಿದೆ. ನಾಪತ್ತೆಯಾದವರ ಪತ್ತೆ ಚುರುಕಾಗಿ ನಡೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿದೆ ಎಂದು ಪರಿಸ್ಥಿತಿಯನ್ನು ವಿವರಿಸಿದರು.

ಮನವಿಗೆ ಪ್ರತಿಕ್ರಿಯಿಸಿದ ಸಚವಿರು ಬೋಟ್‌ ಪತ್ತೆ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಪತ್ತೆಗೆ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.