ಶಿರ್ವ: ‘ನಮ್ಮ ಹಿರಿಯರು ಪ್ರಕೃತಿಯ ಜೊತೆಗೆ ಬೆಳೆದವರು. ಹಿರಿಯರ ಅಂದಿನ ಕಷ್ಟದ ಶ್ರಮಜೀವನ, ಸತ್ಯ, ನಿಷ್ಠೆ ಪ್ರಾಮಾಣಿಕತೆ ಇಂದು ಮರೆಯಾಗುತ್ತಿದೆ. ಕೃಷಿ ಸಂಸ್ಕೃತಿ, ಪ್ರಕೃತಿಯ ನಂಟು ನವಪೀಳಿಗೆಗೆ ಪರಿಚಯಿಸುವ ಗಾದಂತ್ ಕ್ಹೇಳ್ ಮೇಳ್ ಅರ್ಥಪೂರ್ಣ ಕಾರ್ಯಕ್ರಮ’ ಎಂದು ಬೆಂಗಳೂರಿನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಿರ್ದೇಶಕ ಎಳ್ಳಾರೆ ಸದಾಶಿವ ಪ್ರಭು ಹೇಳಿದರು.
ಅವರು ಬಂಟಕಲ್ಲು ರಾಜಾಪುರ ಸಾರಸ್ವತ ಸೇವಾ ವೃಂದದ ಆಶ್ರಯದಲ್ಲಿ ಶ್ರೀದುರ್ಗಾ ಮಹಿಳಾ ವೃಂದದ ಸಹಭಾಗಿತ್ವದಲ್ಲಿ ಸಡಂಬೈಲು ಅನಂತರಾಮ ವಾಗ್ಲೆ ಅವರ ಗದ್ದೆಯಲ್ಲಿ ನಡೆದ 8ನೇ ವರ್ಷದ ‘ಗಾದಂತ್ ಕ್ಹೇಳ್ ಮೇಳ್’ ಕೆಸರು ಗದ್ದೆ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪ್ರಗತಿಪರ ಕೃಷಿಕೆ ಸಡಂಬೈಲು ಹೆಬ್ಬಾಗಿಲು ಸುನೀತಾ ಕೃಷ್ಣ ವಾಗ್ಲೆ, ಮೂಲತಃ ಕೃಷಿಕರಾಗಿದ್ದು, ಪ್ರಸ್ತುತ ಇನ್ನಂಜೆ ಎಸ್ವಿಎಚ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿದ ಕುಂಜರ್ಗ ರಾಜೇಂದ್ರ ಪ್ರಭು ಅವರನ್ನು ಸನ್ಮಾನಿಸಲಾಯಿತು. ಸಾರಸ್ವತ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ಕೃಷ್ಣ ನಾಯಕ್ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿದರು.
ಬಂಟಕಲ್ಲು ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಜಯರಾಮ ಪ್ರಭು ಗಂಪದಬೈಲು, ಸ್ಥಳೀಯ ಉದ್ಯಮಿ ರಾಮಚಂದ್ರ ನಾಯಕ್ ಪಡುಬೆಳ್ಳೆ, ಗದ್ದೆಯ ಯಜಮಾನ ಅನಂತರಾಮ ವಾಗ್ಲೆ, ಶ್ರೀದುರ್ಗಾ ಮಹಿಳಾ ವೃಂದದ ಅಧ್ಯಕ್ಷೆ ಸುನೀತಾ ದೇವೇಂದ್ರ ನಾಯಕ್, ಕಸಾಪ ಕಾಪು ತಾಲ್ಲೂಕು ಘಟಕದ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ, ಸೇವಾ ವೃಂದದ ಕಾರ್ಯದರ್ಶಿ ವಿಶ್ವನಾಥ ಬಾಂದೇಲ್ಕರ್ ಭಾಗವಹಿಸಿದ್ದರು. ಆರ್ಎಸ್ಬಿ ಸೇವಾ ವೃಂದದ ಅಧ್ಯಕ್ಷ ಕೆ.ಆರ್.ಪಾಟ್ಕರ್ ಸ್ವಾಗತಿಸಿದರು. ದೇವದಾಸ್ ಪಾಟ್ಕರ್ ನಿರೂಪಿಸಿದರು.
ಕಾರ್ಯಕ್ರಮದ ವಿಶೇಷತೆಗಳು:
ಕೆಸರು ಗದ್ದೆಗೆ ಹಾಲು ಎರೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಕೆಸರುಗದ್ದೆಯಲ್ಲಿ ಮೂಡುಬೆಳ್ಳೆ ಜಡ್ಡು ಉಮೇಶ್ ನಾಯಕ್ ಅವರ ಕಂಬಳದ ಕೋಣಗಳ ಓಟ ಪ್ರದರ್ಶಿಸಲಾಯಿತು. ಗದ್ದೆಯಲ್ಲಿ ನಿಧಿಶೋಧ ಮಕ್ಕಳಿಗೆ ಕೆಸರುಗದ್ದೆ ಓಟ ಅಡಿಕೆ ಹಾಳೆ ಓಟ ಚೆಂಡು ಹೆಕ್ಕುವುದು ಹಲಸಿನ ಬೀಜ ಹೆಕ್ಕುವುದು ಪ್ರೌಢರಿಗೆ ತಂಡಗಳಲ್ಲಿ ಕಂಬಳ ಓಟ ರಿಲೇ ಗೂಟಕ್ಕೆ ಸುತ್ತುಹಾಕಿ ಓಟ ಬಲೂನ್ ಓಟ ಹಿರಿಯರಿಗೆ ದಂಪತಿ ಉಪ್ಪುಮೂಟೆ ಓಟ ಕಂಬಳ ಓಟ ರಿಲೇ ಓಟ ಮಡಲು ಹೆಣೆಯುವುದು ಬೈಹುಲ್ಲಿನಿಂದ ಹಗ್ಗ ತಯಾರಿ ಬಲೂನ್ ಓಟ ಹಗ್ಗಜಗ್ಗಾಟ ಮಡಕೆ ಒಡೆಯುವ ಸ್ಪರ್ಧೆ ನಡೆಯಿತು. ಕೃಷಿ ಕುಟುಂಬದ ಜೀವನ ಪದ್ಧತಿಯ ಊಟ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.