ADVERTISEMENT

ಆದ್ಯತೆ ಮೇರೆಗೆ ಬಂದರು ಅಭಿವೃದ್ಧಿ: ಸಚಿವ ಮಂಕಾಳ ವೈದ್ಯ

ಗಂಗೊಳ್ಳಿ ಬಂದರು ಆಧುನೀಕರಣ ಕಾಮಗಾರಿಗೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 6:55 IST
Last Updated 10 ಅಕ್ಟೋಬರ್ 2025, 6:55 IST
ಕುಂದಾಪುರ ಸಮೀಪದ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಪಿಎಂಎಂಎಸ್‌ವೈ ಯೋಜನೆಯಡಿ ನಡೆಯಲಿರುವ ಬಂದರು ಆಧುನೀಕರಣ ಕಾಮಗಾರಿಗೆ ಸಚಿವ ಮಂಕಾಳ ವೈದ್ಯ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಶಾಸಕ ಗುರುರಾಜ್ ಗಂಟಿಹೊಳೆ, ಮುಖಂಡ ಗೋಪಾಲ ಪೂಜಾರಿ ಭಾಗವಹಿಸಿದ್ದರು
ಕುಂದಾಪುರ ಸಮೀಪದ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಪಿಎಂಎಂಎಸ್‌ವೈ ಯೋಜನೆಯಡಿ ನಡೆಯಲಿರುವ ಬಂದರು ಆಧುನೀಕರಣ ಕಾಮಗಾರಿಗೆ ಸಚಿವ ಮಂಕಾಳ ವೈದ್ಯ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಶಾಸಕ ಗುರುರಾಜ್ ಗಂಟಿಹೊಳೆ, ಮುಖಂಡ ಗೋಪಾಲ ಪೂಜಾರಿ ಭಾಗವಹಿಸಿದ್ದರು   

ಕುಂದಾಪುರ: ‘ಗಂಗೊಳ್ಳಿ ಬಂದರಿನಲ್ಲಿ ಮೂಲಸೌಕರ್ಯ ಮತ್ತು ಕಾಮಗಾರಿಯಲ್ಲಿ ವ್ಯತ್ಯಾಸ ಆಗಿರುವುದರಿಂದ ಸಮಸ್ಯೆ ಉಂಟಾಗಿದ್ದು, ಇದನ್ನು ಆದ್ಯತೆ ನೆಲೆಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಮೀನುಗಾರಿಕಾ ಹಾಗೂ ಬಂದರು ಸಚಿವ ಮಂಕಾಳ ವೈದ್ಯ ಹೇಳಿದರು.

ಗಂಗೊಳ್ಳಿಯ ಬಂದರಿನಲ್ಲಿ ಮೀನುಗಾರಿಕಾ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಪಿಎಂಎಂಎಸ್‌ವೈ ಯೋಜನೆಯಡಿ ನಡೆಯಲಿರುವ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.

ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕಾಗಿ ₹6.5 ಕೋಟಿ ಮೀಸಲಿಡಲಾಗಿದ್ದು, ಜೆಟ್ಟಿ ಕುಸಿತ ಪ್ರಕರಣದ ಲೋಕಾಯುಕ್ತ ವರದಿ ಬರುವ ತನಕ ಯಾವುದೇ ಅಭಿವೃದ್ಧಿ ಮಾಡುವಂತಿಲ್ಲ. ಎಷ್ಟು ಬೇಗ ಲೋಕಾಯುಕ್ತ ಇಲಾಖೆ ತನಿಖೆ ನಡೆಸಿ ವರದಿ ನೀಡುತ್ತದೆಯೋ ಅಷ್ಟು ಬೇಗ ಕೆಲಸ ಪ್ರಾರಂಭಿಸಿ, ಮೀನುಗಾರರಿಗೆ ಅನುಕೂಲ ಮಾಡಿಕೊಡಲು ಸಾಧ್ಯವಾಗುತ್ತದೆ. ₹5 ಸಾವಿರ ಕೋಟಿ ಅನುದಾನ ನೀಡಿದಲ್ಲಿ ಬಂದರಿನ ಎಲ್ಲಾ ಅಭಿವೃದ್ಧಿ ಮಾಡಬಹುದು. ಬಂದರುಗಳ ಅಭಿವೃದ್ಧಿಗೆ ತೊಡಕಾಗಿದ್ದ ಸಿಆರ್‌ಝಡ್ ಸಮಸ್ಯೆ ಬಗೆಹರಿಸಲು ಒಂದೂವರೆ ವರ್ಷ ತಗುಲಿದ್ದು, ಇದರಿಂದಾಗಿ ₹68 ಕೋಟಿ ಮರವಂತೆ ಹೊರ ಬಂದರು ಕಾಮಗಾರಿ ಬಾಕಿ ಉಳಿದಿತ್ತು ಎಂದರು. 

ADVERTISEMENT

340 ಕಿ.ಮೀ ಉದ್ದದ ಕರಾವಳಿ ಪ್ರದೇಶದಲ್ಲಿ 13 ಬಂದರುಗಳಿವೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಂದರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಗಂಗೊಳ್ಳಿ ಮೀನುಗಾರಿಕೆ ಬಂದರಿನ ಆಧುನೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ₹22.18 ಕೋಟಿ ಮೀಸಲಿಟ್ಟಿದ್ದು, ಮಳೆಗಾಲ ಪ್ರಾರಂಭವಾಗುವುದರ ಒಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ಮಾಹಿತಿ ನೀಡಿದರು. 

ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ‘ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳಲ್ಲಿ ಗಂಗೊಳ್ಳಿ ಬಂದರು ಬಹಳ ಹಿಂದುಳಿದಿದ್ದು, ಜೆಟ್ಟಿ ಹಾಗೂ ಡ್ರೆಜ್ಜಿಂಗ್ ಶಾಶ್ವತ ಸಮಸ್ಯೆಯಾಗಿದೆ. ಸಾಗರ ಮಾಲಾ ಮತ್ತು ಮತ್ಸ್ಯಸಂಪದ ಯೋಜನೆಯಡಿ ಬಂದರುಗಳನ್ನು ಅಭಿವೃದ್ಧಿಪಡಿಸಲು ವಿಪುಲ ಅವಕಾಶಗಳಿವೆ. ಈ ಭಾಗದಲ್ಲಿ ದೂರದೃಷ್ಟಿಯ ಯೋಜನೆಗಳಿಗೆ ತುಂಬಾ ಅವಕಾಶಗಳಿವೆ. ಕೇಂದ್ರದ ಯೋಜನೆಗಳನ್ನು ತರಲು ಯಾವುದೇ ಕಾರಣಕ್ಕೂ ಹಿಂದೆ ಬೀಳಬಾರದು. ಇರುವ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸುವ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಿದೆ’ ಎಂದರು.

ಮುಖಂಡ ಕೆ.ಗೋಪಾಲ ಪೂಜಾರಿ, ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಸನ್ನ ಕುಮಾರ್ ಶೇಟ್, ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಖಾರ್ವಿ, ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ ಕುಮಾರ್ ಕಳ್ಳೇರ್, ಮೀನುಗಾರಿಕೆ ಅಪರ ನಿರ್ದೇಶಕ ಸಿದ್ಧಯ್ಯ ಡಿ., ಜಂಟಿ ನಿರ್ದೇಶಕ ವಿವೇಕ ಆರ್., ಉಪನಿರ್ದೇಶಕ ಸಂಜೀವ ಅರಕೇರಿ, ಸಹಾಯಕ ನಿರ್ದೇಶಕ ಆಶಾಲತಾ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶೋಭಾ, ಸಹಾಯಕ ನಿದೇಶಕಿ ಸುಮಲತಾ ಇದ್ದರು.

ಸುಂದರ.ಜಿ ಸ್ವಾಗತಿಸಿದರು. ಮೀನುಗಾರಿಕೆ ಇಲಾಖೆಯ ಗೋಪಾಲಕೃಷ್ಣ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.