ಉಡುಪಿ:ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರ ಸುಳ್ಳು ವರದಿ ಮಂಡಿಸಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.
ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಟೀಕಿಸುವ ಸರ್ಕಾರ, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅಂದಿನ ರಾಜ್ಯಪಾಲರಾದ ಹಂಸರಾಜ್ ಭಾರಧ್ವಾಜ್ ಅವರ ಭಾಷಣಕ್ಕೆ ವಿರೋಧ ವ್ಯಕ್ತಪಡಿಸಿದ್ದನ್ನು ಕಾಂಗ್ರೆಸ್ ಮುಖಂಡರು ನೆನಪಿಸಿಕೊಳ್ಳಲಿ ಎಂದು ಕುಟುಕಿದ್ದಾರೆ.
22 ಪುಟಗಳ ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯ ಸರ್ಕಾರದ ಸಾಧನೆ ಎಂಬಂತೆ ಬಿಂಬಿಸಲಾಗಿದೆ. ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಜ್ಯ ಸರ್ಕಾರದ ಸಾಧನೆ ಎಂದು ಹೇಳಿಕೊಳ್ಳುವ ಯತ್ನ ನಡೆದಿದೆ. ರಾಜ್ಯದಲ್ಲಿ ಕುಡಿಯುವ ನೀರಿನ ಘಟಕಗಳ ಅವ್ಯವಹಾರದ ಬಗ್ಗೆ ತನಿಖೆ ನಡೆಸದ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಸಾಧನೆ ಮಾಡಿದ್ದೇವೆ ಎಂದು ವೈಭವೀಕರಿಸಿದೆ ಎಂದು ಆರೋಪಿಸಿದ್ದಾರೆ.
ಇಸ್ರೇಲ್ ಮಾದರಿ ಕೃಷಿ ಪದ್ಧತಿ ಘೋಷಣೆಯಲ್ಲಿ ಉಳಿದಿದೆ. ಬಡವರ ಬಂಧು ಸಾಲ ಯೋಜನೆ ಜಾರಿಯಾಗಿಲ್ಲ. ವಸತಿ ಯೋಜನೆಗಳಿಗೆ ಹಣ ಕೊಟ್ಟಿಲ್ಲ. ಒಟ್ಟಾರೆ ರಾಜ್ಯಪಾಲರ ಭಾಷಣ ಸುಳ್ಳುಗಳ ಕಂತೆಯಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.