ADVERTISEMENT

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸರ್ಕಾರದ ನೆರವು: ಸುನಿಲ್‌ ಕುಮಾರ್

ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ₹ 2 ಕೋಟಿ ವೆಚ್ಚದ ಕಟ್ಟಡ ಉದ್ಘಾಟಿಸಿದ ಸುನಿಲ್‌ ಕುಮಾರ್

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 3:14 IST
Last Updated 29 ಸೆಪ್ಟೆಂಬರ್ 2022, 3:14 IST
ಕಟ್ಟಡವನ್ನು ಸಚಿವ ಸುನಿಲ್‌ ಕುಮಾರ್‌ ಸಮ್ಮುಖದಲ್ಲಿ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರ ಶ್ರೀಧರ ಪೈ ಉದ್ಘಾಟಿಸಿದರು
ಕಟ್ಟಡವನ್ನು ಸಚಿವ ಸುನಿಲ್‌ ಕುಮಾರ್‌ ಸಮ್ಮುಖದಲ್ಲಿ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರ ಶ್ರೀಧರ ಪೈ ಉದ್ಘಾಟಿಸಿದರು   

ಹೆಬ್ರಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿ ಗಳ ಭವಿಷ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪಿಸುತ್ತಿದ್ದು, ಪ್ರಾಥಮಿಕ ಶಿಕ್ಷಣದಿಂದ ಪಿಯುಸಿವರೆಗಿನ ಎಲ್ಲಾ ವಿಭಾಗಗಳು ಒಂದೇ ಸೂರಿನಡಿ ಲಭ್ಯವಾಗಲಿವೆ’ ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು.

ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳಿಸಿರುವ ನೂತನ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಬಳಿಕ ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲು ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತರಲಾಗಿದೆ. 20 ಲಕ್ಷ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತಿದ್ದಾರೆ ಎಂದು ಅವರು ತಿಳಿಸಿದರು.

ADVERTISEMENT

ಹೊಸ ಕಟ್ಟಡಕ್ಕೆ ಅನುದಾನ: ಹಳೆಯ ಕಟ್ಟಡಗಳ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸಲು ₹70 ಲಕ್ಷ ಬಿಡುಗಡೆ ಮಾಡಲಾಗಿದೆ. ಮುನಿಯಾಲು ಕ್ರೀಡಾಂಗಣವನ್ನು ಹೆಬ್ರಿ ತಾಲ್ಲೂಕಿನ ಮಾದರಿ ಕ್ರೀಡಾಂಗಣವಾಗಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಗ್ರಾಮಕ್ಕೊಂದು ಮಾದರಿ ಶಾಲೆ: ರಾಜ್ಯ ಸರ್ಕಾರ ಗ್ರಾಮಕ್ಕೊಂದು ಮಾದರಿ ಸಾಲೆ ನಿರ್ಮಿಸಲು ಚಿಂತನೆ ನಡೆಸುತ್ತಿದೆ. ಆ ಮೂಲಕ ಎಲ್ಲ ವಿದ್ಯಾರ್ಥಿಗಳಿಗೆ ಸವಲತ್ತು ಮತ್ತು ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಖಾಸಗಿ ಶಾಲೆಗಳ ಜೊತೆ ಸರ್ಕಾರಿ ಶಾಲೆಗಳು ಸ್ಪರ್ಧೆ ನಡೆಸಬೇಕಿದೆ ಎಂದರು.

ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.