ಪಡುಬಿದ್ರಿ: ‘ಸರ್ಕಾರ ಮತ್ತು ಪಕ್ಷ ಮಹತ್ತರವಾದ ಜವಾಬ್ದಾರಿ ನೀಡಿದೆ. ಮುಖ್ಯಮಂತ್ರಿ ನಿರ್ದೇಶನದಂತೆ ತಂಡವಾಗಿ ಜಿಲ್ಲೆಯ ಎಲ್ಲ ಶಾಸಕರ ಸಹಕಾರ ಪಡೆದು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ’ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಶುಕ್ರವಾರ ಜಿಲ್ಲೆಗೆ ಭೇಟಿ ನೀಡಿದ ಅವರನ್ನು ಹೆಜಮಾಡಿಯಲ್ಲಿ ಸ್ವಾಗತಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
‘ಜಿಲ್ಲೆಯ ಸಮಸ್ಯೆಗಳಿಗೆ ಧ್ವನಿಯಾಗಬೇಕು. ಜನರ ಬಹುಕಾಲದ ಬೇಡಿಕೆ, ನಿರೀಕ್ಷೆಗಳ ಅರಿವಿದೆ. ಎರಡೂ ಜಿಲ್ಲೆಗಳ ಶಾಸಕರ ಸಹಕಾರ ಪಡೆದು ಪರಿಹರಿಸಲು ಆದ್ಯತೆ ನೀಡಲಾಗುವುದು. ಸರ್ಕಾರದ ಆಡಳಿತ ಮತ್ತು ಪಕ್ಷ ಎರಡೂ ಕೂಡಾ ಜೊತೆ ಜೊತೆಯಾಗಿ ನಡೆಯಬೇಕು. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಬಂದಿರುವ ನಮಗೆಲ್ಲರಿಗೂ ಪಕ್ಷ ತಾಯಿ ಇದ್ದಂತೆ. ಹಾಗಾಗಿ ಪಕ್ಷದ ಚಟುವಟಿಕೆಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದರು.
ಜಿಲ್ಲಾಡಳಿತದ ಪರವಾಗಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ ಸ್ವಾಗತಿಸಿದರು. ಬಳಿಕ ಮಹಿಳಾ ಮೋರ್ಚಾ ಸದಸ್ಯೆಯರು ಆರತಿ ಬೆಳಗಿ, ತಿಲಕವಿಟ್ಟು ಬರಮಾಡಿಕೊಂಡರು.
ಶಾಸಕರಾದ ಲಾಲಾಜಿ ಮೆಂಡನ್, ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಪ್ರಮುಖರಾದ ಕೆ. ಉದಯಕುಮಾರ್ ಶೆಟ್ಟಿ, ಯಶಪಾಲ್ ಸುವರ್ಣ, ಕುತ್ಯಾರ್ ನವೀನ್ ಶೆಟ್ಟಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.