ಉಡುಪಿ: ಸರ್ವೀಸ್ ಬಂದೂಕಿನಿಂದ ಗುಂಡು ಸಿಡಿದು ಜಿಲ್ಲಾ ಸಶಸ್ತ್ರ ಪಡೆಯ ಹೆಡ್ ಕಾನ್ಸ್ಟೆಬಲ್ ರಾಜೇಶ್ ಕುಂದರ್ ಶುಕ್ರವಾರ ಮೃತಪಟ್ಟಿದ್ದಾರೆ.
ಆದಿ ಉಡುಪಿಯ ದಿ.ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಕೇಂದ್ರಕ್ಕೆ ರಾಜೇಶ್ ಅವರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಕರ್ತವ್ಯ ನಿರತರಾಗಿದ್ದ ವೇಳೆಯೇ ಬಂದೂಕಿನಿಂದ ಸಿಡಿದ ಗುಂಡು ಅವರ ಪ್ರಾಣವನ್ನು ಬಲಿ ಪಡೆದಿದೆ.
‘ಪ್ರಕರಣದ ತನಿಖೆ ನಡೆಯುತ್ತಿದ್ದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎಫ್ಎಸ್ಎಲ್ ಹಾಗೂ ಫೊರೆನ್ಸಿಕ್ ತಜ್ಞರ ತಂಡ ಪರಿಶೀಲನೆ ನಡೆಸಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ’ ಎಂದು ಎಸ್ಪಿ ಎನ್.ವಿಷ್ಣುವರ್ಧನ್ ತಿಳಿಸಿದ್ದಾರೆ.
ಈಚೆಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಮಾರಾಮಾರಿ ಘಟನೆಯಲ್ಲಿ ರಾಜೇಶ್ ಕುಂದರ್ ಅವರನ್ನು ಅಮಾನತು ಮಾಡಲಾಗಿತ್ತು. ಎರಡು ದಿನಗಳ ಹಿಂದಷ್ಟೆ ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.
2000ದಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದ ರಾಜೇಶ್ ಕುಂದರ್ ಪರಿಸರ ಪ್ರೇಮಿಯಾಗಿ ಗುರುತಿಸಿಕೊಂಡಿದ್ದರು. ವೃದ್ಧಾಶ್ರಮ ನಡೆಸಬೇಕು ಎಂಬ ಉದ್ದೇಶದಿಂದ ಹಿರಿಯಡ್ಕದ ಹರಿಕಂಡಿಗೆಯಲ್ಲಿ 60 ಸೆಂಟ್ಸ್ ಜಾಗ ಖರೀದಿ ಮಾಡಿದ್ದರು. ಎಸ್ಪಿ ವಸತಿ ಗೃಹದಲ್ಲಿ ಗಾರ್ಡನರ್ ಆಗಿ ಕೆಲಸ ಮಾಡಿದ್ದರು ಎಂದು ಸಂಬಂಧಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.