ಉಡುಪಿ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆಯಡಿ ಬಿದ್ಕಲ್ಕಟ್ಟೆಯಲ್ಲಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ವಿದ್ಯಾರ್ಥಿನಿಯರಾದ ಎಚ್.ಆರ್.ಕಾವ್ಯಾ ಹಾಗೂ ರಮ್ಯಾ ಅವರ ಕುಟುಂಬಕ್ಕೆ ಶನಿವಾರ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮಿಜಿ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಶ್ರೀಗಳು, ‘ಯಕ್ಷಗಾನ ಕಲಾರಂಗ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ದೊಡ್ಡ ಸಂದೇಶ ನೀಡುತ್ತಿದೆ. ಸಂಸ್ಥೆಯಲ್ಲಿ ನಿಸ್ಪೃಹ ಕಾರ್ಯಕರ್ತರು ಕೆಲಸ ಮಾಡುವುದನ್ನು ಕಂಡು ಸಂತಸವಾಗಿದೆ. ಉಳಿದ ಸಂಘಟನೆಗಳಿಗೆ ಮಾದರಿ ಎಂಬಂತಿದೆ’ ಎಂದರು.
ದುಬೈನಲ್ಲಿ ಉದ್ಯೋಗಿಯಾಗಿರುವ ಮರ್ಣೆ ಉಮೇಶ್ ಭಟ್ ಮನೆ ನಿರ್ಮಾಣಕ್ಕೆ ₹ 5 ಲಕ್ಷ ನೆರವು ನೀಡಿದ್ದಾರೆ. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಉಮೇಶ್ ಭಟ್ ಅವರ ಪತ್ನಿ ಭಾರತಿ ಭಟ್ ಉಪಸ್ಥಿತರಿದ್ದರು.
ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಕೆ.ಗಣೇಶ್ ರಾವ್, ಉಪಾಧ್ಯಕ್ಷ ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ, ಕೋಶಾಧಿಕಾರಿ ಕೆ. ಮನೋಹರ್, ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯಿಂದ ಬಡವರಿಗೆ ಕಟ್ಟಿಸಿಕೊಡಲಾಗುತ್ತಿರುವ 18ನೇ ಮನೆ ಇದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.