
ಉಡುಪಿ: ಮಾನವ ಹಕ್ಕುಗಳ ಸಂರಕ್ಷಣೆ ಸರ್ಕಾರಿ ಅಧಿಕಾರಿಗಳ ಕರ್ತವ್ಯ. ಅವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹೇಳಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ಮೂಲಭೂತ ಹಕ್ಕುಗಳ ಉಲ್ಲಂಘನೆಯಾದಾಗ ಆಯೋಗದ ಮುಂದೆ ದೂರುಗಳನ್ನು ಸಲ್ಲಿಸುತ್ತಾರೆ. ದೂರುಗಳಿಗೆ ಸಂಬಂಧಿಸಿದಂತೆ ವರದಿಯನ್ನು ನೀಡಲು ನೋಟಿಸ್ ನೀಡುತ್ತೇವೆ. ಅವುಗಳನ್ನು ಸಕಾಲದಲ್ಲಿ ನೀಡಬೇಕು. ಅವುಗಳನ್ನು ಪರಿಶೀಲಿಸಿದಾಗ ತಪ್ಪು ಮಾಡಿರುವುದು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಕೆಲ ಗಂಭೀರ ಪ್ರಕರಣಗಳಲ್ಲಿ ಪರಿಹಾರವನ್ನು ಒದಗಿಸಲು ಸಹ ಶಿಫಾರಸು ಮಾಡಲಾಗುವುದು ಎಂದರು.
ಆಯೋಗದ ಸದಸ್ಯ ಎಸ್.ಕೆ ವಂಟಿಗೋಡಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಗೌರವಯುತವಾಗಿ ಬದುಕುವ ಹಕ್ಕು ಇದೆ. ಅವುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ಅವುಗಳನ್ನು ಪ್ರಶ್ನಿಸುವ ಹಕ್ಕು ಸಹ ಇದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಈ ಹಿಂದೆ 3 ತಾಲ್ಲೂಕು ಇದ್ದ ಉಡುಪಿ ಜಿಲ್ಲೆಯು ಪ್ರಸ್ತುತ 7 ತಾಲ್ಲೂಕುಗಳಾಗಿ ಮಾರ್ಪಟ್ಟಿದ್ದರೂ ಸಹ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿಎಫ್ಒ ರುಥ್ರೇನ್ ಪಿ., ವನ್ಯಜೀವಿ ವಿಭಾಗದ ಡಿಎಫ್ಒ ಶಿವರಾಂ ಬಾಬು ಉಪಸ್ಥಿತರಿದ್ದರು.
12 ದೂರುಗಳು ದಾಖಲು
‘ಮಾನವ ಹಕ್ಕುಗಳ ಆಯೋಗಕ್ಕೆ ಜಿಲ್ಲೆಯಲ್ಲಿ ಗುರುವಾರ ಹೊಸದಾಗಿ 12 ದೂರುಗಳು ದಾಖಲಾಗಿವೆ. ಅವುಗಳಿಗೆ ಸಂಬಂಧಿಸಿ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರ ಕ್ರಮ ಕೈಗೊಳ್ಳುತ್ತೇವೆ’ ಎಂದು ಟಿ.ಶ್ಯಾಮ್ ಭಟ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ‘ಜಿಲ್ಲೆಯಲ್ಲಿ ಈ ಹಿಂದೆ 9 ಪ್ರಕರಣಗಳು ಇತ್ಯರ್ಥಗೊಳ್ಳಲು ಬಾಕಿ ಇದ್ದವು. ಅವುಗಳಲ್ಲಿ ಎಂಟು ಪ್ರಕರಣಗಳಿಗೆ ಸಂಬಂಧಿಸಿ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಒಂದು ಪ್ರಕರಣವು ರಾಜ್ಯ ಮಟ್ಟದಲ್ಲಿ ಇತ್ಯರ್ಥಗೊಳ್ಳಬೇಕಾಗಿರುವುದರಿಂದ ಬಾಕಿ ಉಳಿದಿದೆ’ ಎಂದರು. ‘ಕೆಲವರು ಆಯೋಗದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕಾನೂನು ಬಾಹಿರವಾಗಿ ಕೆಲಸ ಮಾಡಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಒಂದು ಪ್ರಕರಣ ಉಡುಪಿಯಲ್ಲಿಯೂ ಇದೆ’ ಎಂದು ತಿಳಿಸಿದರು. ಮಾನವ ಹಕ್ಕುಗಳ ಪರಿಷತ್ ಮೊದಲಾದ ನಕಲಿ ಹೆಸರುಗಳನ್ನಿಟ್ಟು ಇಂತಹ ವಂಚನೆ ನಡೆಸಲಾಗುತ್ತಿದ್ದು ಜನರು ಈ ಕುರಿತು ಜಾಗೃತರಾಗಿರಬೇಕು ಎಂದು ಹೇಳಿದರು.
ಜಿಲ್ಲಾಸ್ಪತ್ರೆಗೆ ಭೇಟಿ
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ನಗರದ ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಯ ನೋಂದಣಿ ಕೇಂದ್ರ ರೋಗಿಗಳ ವಾರ್ಡ್ ತೀವ್ರ ನಿಗಾ ಘಟಕ ಔಷಧಿ ಉಗ್ರಾಣ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ರಾಜ್ಯದ ಔಷಧಿ ಕೇಂದ್ರಗಳಿಂದ ಸರಬರಾಜಾದ ಔಷಧಿ ಸೇರಿದಂತೆ ಮತ್ತಿತರ ಪರಿಕರಗಳನ್ನು ಉಗ್ರಾಣದ ಒಳಭಾಗದಲ್ಲಿ ಇಡದೇ ಕಾರಿಡಾರ್ಗಳಲ್ಲಿ ದಾಸ್ತಾನು ಮಾಡಿರುವ ಬಗ್ಗೆ ಪ್ರಶ್ನಿಸಿದ ಅವರು ಔಷಧಿಗಳು ಅವಧಿ ಮುನ್ನವೇ ಜನಸಾಮಾನ್ಯರಿಗೆ ಉಪಯೋಗಕ್ಕೆ ಬರುವಂತೆ ಕ್ರಮ ವಹಿಸಬೇಕು ಎಂದರು. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಸ್ಪತ್ರೆಯ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಅವರು ಆಸ್ಪತ್ರೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.