ಉಡುಪಿ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಡಾನ್ಸ್ ಕರ್ನಾಟಕ ಡಾನ್ಸ್ ಕಾರ್ಯಕ್ರಮದಲ್ಲಿ ಕರಾವಳಿಯ ಶ್ರೀಮಂತ ಕಲಾ ಪ್ರಕಾರವಾದ ಯಕ್ಷಗಾನವನ್ನು ಸಿನಿಮಾ ಸಂಗೀತದ ಜತೆಗೆ ಅಶ್ಲೀಲ ಹಾವ ಭಾವದೊಂದಿಗೆ ಪ್ರದರ್ಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಸುಶಾಂತ್ ಶೆಟ್ಟಿ ಅಚ್ಲಾಡಿ ಎಂಬುವರು ಕೋಟ ಠಾಣೆಗೆ ದೂರು ನೀಡಿದ್ದಾರೆ.
ಯಕ್ಷಗಾನವನ್ನು ಧಾರ್ಮಿಕ ಭಾವನೆಯಲ್ಲಿ ಬೆಳಕಿನ ಸೇವೆಯಾಗಿ ಪೂಜ್ಯ ಭಾವದಲ್ಲಿ ಗೌರವಿಸಲಾಗುತ್ತದೆ. ಆದರೆ, ಖಾಸಗಿ ವಾಹಿನಿ ಯಕ್ಷಗಾನವನ್ನು ವಿರೂಪಗೊಳಿಸಿ ಪ್ರದರ್ಶಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿರುವ ಹಿನ್ನೆಲೆಯಲ್ಲಿ ವಾಹಿನಿಯ ಮುಖ್ಯಸ್ಥ ರಾಘವೇಂದ್ರ ಹುಣಸೂರು, ನೃತ್ಯ ಸಂಯೋಜಕ ಮಂಜು ಮಾಸ್ಟರ್ ಹಾಗೂ ಸಂಬಂಧಪಟ್ಟವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದೂರು ಸ್ವೀಕರಿಸಿದ್ದು ಪರಿಶೀಲನೆ ನಡೆಯುತ್ತಿದೆ. ಇದುವರೆಗೂ ಪ್ರಕರಣ ದಾಖಲು ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.