ADVERTISEMENT

ಉಡುಪಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ವಶ

ಕೋಟ, ಬ್ರಹ್ಮಾವರ, ಕಾರ್ಕಳ ನಗರ ಠಾಣಾ ಪೊಲೀಸರಿಂದ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 5:09 IST
Last Updated 17 ಅಕ್ಟೋಬರ್ 2025, 5:09 IST
ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿಗಳನ್ನು ಪೊಲೀಸರು ಪರಿಶೀಲಿಸಿದರು
ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿಗಳನ್ನು ಪೊಲೀಸರು ಪರಿಶೀಲಿಸಿದರು   

ಉಡುಪಿ: ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿಗಳನ್ನು ಪೊಲೀಸರು ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ.

ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆ ಗ್ರಾಮದ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಮನೆಯೊಂದರ ಬಳಿಯ ಶೆಡ್‌ನಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಹಾಗೂ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು ಮಾಡಿದ ಆರೋಪದಲ್ಲಿ ಕೆ. ಪ್ರಶಾಂತ ಜೋಗಿ (44) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಮಾರು ₹1.61 ಲಕ್ಷ ಮೌಲ್ಯದ 332 ಬಾಕ್ಸ್‌ ವಿವಿಧ ಬ್ರ್ಯಾಂಡ್‌ಗಳ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಆರೂರು ಗ್ರಾಮದ ಕುಂಜಾಲ್‌ ಎಂಬಲ್ಲಿರುವ ಮನೆಯ ಪಕ್ಕದ ಶಾಮಿಯಾನ ಗೋದಾಮಿನಲ್ಲಿ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ ಆರೋಪದಲ್ಲಿ ಶಿವಾನಂದ ರಾವ್ (50) ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸುಮಾರು ₹35 ಸಾವಿರ ಮೌಲ್ಯದ 16 ಬಾಕ್ಸ್‌ ವಿವಿಧ ಬ್ರಾಂಡ್‌ಗಳ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ ₹1 ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಹಾಗೂ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ದಾಸ್ತಾನಿರಿಸಿದ್ದ ಆರೋಪದಲ್ಲಿ ಸತ್ಯೇಂದ್ರ ನಾಯಕ್, ಶ್ರೀಕಾಂತ್ ನಾಯಕ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿಗಳ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಹರಿರಾಮ್‌ ಶಂಕರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ವಶಪಡಿಸಿಕೊಂಡಿದ್ದ ಪಟಾಕಿಗಳು
ಪಟಾಕಿ ಮಾರಾಟಕ್ಕೆ ಪರವಾನಗಿ ಪಡೆದ ಬಳಿಕ ಮಾರಾಟಗಾರರು ಪಟಾಕಿಗಳನ್ನು ಸರ್ಕಾರ ಸೂಚಿಸಿದ ಸ್ಥಳಗಳಲ್ಲಿ ದಾಸ್ತಾನಿರಿಸಬೇಕು. ಅದನ್ನು ಉಲ್ಲಂಘಿಸಿ ವಸತಿ ಪ್ರದೇಶಗಳಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದೇವೆ
ಹರಿರಾಮ್‌ ಶಂಕರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ