ಉಡುಪಿ: ನಗರಸಭೆ ಚುನಾವಣೆಗೂ ಮುನ್ನ ನಗರದ ಅಭಿವೃದ್ಧಿ ಕುರಿತು ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಲಿವೆ. ಈಗಾಗಲೇ ಪ್ರಮುಖ ಕಾಮಗಾರಿಗಳು ಆರಂಭವಾಗಿದ್ದು, ಪ್ರಗತಿಯಲ್ಲಿವೆ. ಜನರು ಪಕ್ಷದ ಮೇಲಿಟ್ಟಿರುವ ವಿಶ್ವಾಸವನ್ನು ನೂತನ ಜನಪ್ರತಿನಿಧಿಗಳು ಉಳಿಸಿಕೊಂಡು ಮುನ್ನಡೆಬೇಕು ಎಂದು ಶಾಸಕ ರಘುಪತಿ ಭಟ್ ಕಿವಿಮಾತು ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ನಗರಸಭೆಯ ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿ, ಜನಸಂಘದ ಕಾಲದಲ್ಲಿಯೇ ಡಾ.ವಿ.ಎಸ್. ಆಚಾರ್ಯ ಅವರ ದೂರದೃಷ್ಟಿಯ ಆಡಳಿತದಿಂದ ಉಡುಪಿ ನಗರದಲ್ಲಿ ಅಭಿವೃದ್ಧಿಯ ಶಖೆ ಆರಂಭವಾಗಿತ್ತು. ಜನರು ಪಕ್ಷದ ಮೇಲಿಟ್ಟಿದ್ದ ವಿಶ್ವಾಸ ಹಾಗೂ ಕಾರ್ಯಕರ್ತರ ಶ್ರಮದಿಂದ ನಗರಸಭೆಯಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ ಎಂದರು.
ಮತದಾರರು ಬಿಜೆಪಿ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು. ನಾಗರಿಕರ ನಿರೀಕ್ಷೆಗಳು ಹುಸಿಯಾಗದಂತೆ ಎಲ್ಲರೂ ಒಟ್ಟಾಗಿ ಉಡುಪಿ ನಗರವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕು ಎಂದು ಸಲಹೆ ನೀಡಿದ ಶಾಸಕರು ನೂತನ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಹಾಗೂ ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್ ಅವರಿಗೆ ಅಭಿನಂದಿಸಿದರು.
ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.