ಉಡುಪಿ: ಜಿಲ್ಲೆಯಲ್ಲಿ ಸೆ.11ರಿಂದ 17ರವರೆಗೆ 2ನೇ ಸುತ್ತಿನ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 13 ರಿಂದ 20ರವರೆಗೆ ನಡೆದ ಮೊದಲ ಸುತ್ತಿನ ಇಂದ್ರಧನುಷ್ ಕಾರ್ಯಕ್ರಮದಲ್ಲಿ ಎರಡುವರ್ಷದೊಳಗಿನ 3,226 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಶೇ 98.87 ಸಾಧನೆಯಾಗಿದೆ. 800 ಗರ್ಭಿಣಿಯರಿಗೆ ಲಸಿಕೆ ನೀಡಿ ಶೇ 99.88 ಗುರಿ ಮುಟ್ಟಲಾಗಿದೆ ಎಂದು ಮಾಹಿತಿ ನೀಡಿದರು
2ನೇ ಸುತ್ತಿನಲ್ಲಿ 2,033 ಮಕ್ಕಳಿಗೆ ಮತ್ತು 419 ಗರ್ಭಿಣಿಯರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಗ್ರಾಮೀಣ ಪ್ರದೇಶಗಳು, ಕಟ್ಟಡ ನಿರ್ಮಾಣ ಪ್ರದೇಶ ಹಾಗೂ ವಲಸೆ ಕಾರ್ಮಿಕರು ಇರುವ ಕಡೆ ಹೆಚ್ಚಿನ ಗಮನಹರಿಸಿ ಲಸಿಕೆ ನೀಡಲು ಕ್ರಮತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ಅಧಿಕಾರಿಗಳು ನಗರ ವ್ಯಾಪ್ತಿಯಲ್ಲಿ ಲಸಿಕಾ ಅಭಿಯಾನದ ಕುರಿತು ಸೂಕ್ತ ಪ್ರಚಾರ ನಡೆಸಬೇಕು. ಕಾರ್ಮಿಕ ಇಲಾಖೆ ಅಧಿಕಾರಿಗಳು ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಮಾಹಿತಿ ನೀಡಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೂಲಕ ಜಿಲ್ಲೆಯ ಎಲ್ಲಾ 158 ಗ್ರಾಮ ಪಂಚಾಯತ್ಗಳಲ್ಲಿ ಲಸಿಕಾ ಹಾಕುವ ಬಗ್ಗೆ ಮಾಹಿತಿ ನೀಡಬೇಕು ಎಂದರು.
2 ನೇ ಸುತ್ತಿನ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸಂಘ ಸಂಸ್ಥೆಗಳು ಅಗತ್ಯ ನೆರವು ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ , ಆರ್.ಸಿ.ಎಚ್ ಅಧಿಕಾರಿ ಡಾ. ಎಂ.ಜಿ.ರಾಮ ಹಾಗೂ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.