ADVERTISEMENT

ಉಡುಪಿ: ನ.7ರಂದು ಜನಸಂಕಲ್ಪ ಸಮಾವೇಶ, ಸಿಎಂ ಬೊಮ್ಮಾಯಿ ಉಪಸ್ಥಿತಿ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 13:18 IST
Last Updated 2 ನವೆಂಬರ್ 2022, 13:18 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ನ.5ರಂದು ಬೆಳಿಗ್ಗೆ 10ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಜಿಲ್ಲಾ ಜನಸಂಕಲ್ಪ ಸಮಾವೇಶದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 1,318 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

ಜನಸಂಕಲ್ಪ ಸಮಾವೇಶಕ್ಕೆ ಪೂರ್ವಭಾವಿಯಾಗಿ ಪ್ರತಿ ಶಕ್ತಿಕೇಂದ್ರ ಮಟ್ಟದಲ್ಲಿ ಸಭೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಸಮಾವೇಶ ನಡೆಯಲಿದ್ದು, ಪ್ರತಿ ಬೂತ್‌ನಿಂದ ಫಲಾನುಭವಿಗಳು, ಪಕ್ಷದ ಹಿತೈಷಿಗಳು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ತಿಳಿಸಿದರು.

ADVERTISEMENT

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಘಟನಾತ್ಮಕ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.