ಉಡುಪಿ: 12 ನೇ ಶತಮಾನದ ವಚನಕರಾರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದ್ದು, ಕಾಯಕದ ಮಹತ್ವ ತಿಳಿಸಿ, ದಾಸೋಹದ ಸಂಪ್ರದಾಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ನಗರದ ಅಜ್ಜರಕಾಡಿನ ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ನಡೆದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಾಡು ನುಡಿಗಾಗಿ ಸೇವೆ ಸಲ್ಲಿಸಿದ ಅನೇಕ ಮಹನೀಯರಲ್ಲಿ ನುಲಿಯ ಚಂದಯ್ಯ ಕೂಡ ಒಬ್ಬರಾಗಿದ್ದು, ಶರಣ ಸಂಸ್ಕೃತಿ, ಶರಣರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಅದು ನಮ್ಮ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅವರು ನುಲಿಯ ಚಂದಯ್ಯರ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ., ಐ.ಕ್ಯೂ.ಎ.ಸಿ ಘಟಕದ ಸಂಚಾಲಕಿ ಶ್ರೀಮತಿ ಅಡಿಗ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವರ್ಷಾ ಬಿ. ಕೋಟ್ಯಾನ್ ನಿರೂಪಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ನಿಕೇತನ ವಂದಿಸಿದರು.
ವಿದ್ಯಾರ್ಥಿಗಳು ವಚನ ಸಾಹಿತ್ಯ ಇತರ ವಿಷಯಗಳ ಪುಸ್ತಕಗಳನ್ನು ಓದುವುದರೊಂದಿಗೆ ಜ್ಞಾನ ವೃದ್ಧಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು.–ಅಬೀದ್ ಗದ್ಯಾಳ ಹೆಚ್ಚುವರಿ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.