
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ನಲ್ಲಿ ನಿರ್ಮಾಣ ಹಂತದಲ್ಲಿರುವ ಅಂಡರ್ ಪಾಸ್ ಕಾಮಗಾರಿಯ ಸ್ಥಳಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಈಚೆಗೆ ಭೇಟಿ ನೀಡಿ ಪರಿಶೀಲಿಸಿದರು.
ಅಗಲ ಕಿರಿದಾದ ಸರ್ವಿಸ್ ರಸ್ತೆಯನ್ನು ಕುತ್ಪಾಡಿ ಬಲಾಯಿಪಾದೆಯಿಂದ ಕರಾವಳಿ ಬೈಪಾಸ್ ರಸ್ತೆಯ ವರೆಗೆ ವಿಸ್ತರಿಸಿ ನಿರ್ಮಾಣ ಮಾಡುವುದು, ಅಂಬಲಪಾಡಿ-ಬ್ರಹ್ಮಗಿರಿ ನಗರಸಭೆ ಸಂಪರ್ಕ ರಸ್ತೆಯನ್ನು ವಿಸ್ತರಿಸಿ ಅಭಿವೃದ್ಧಿಪಡಿಸುವುದು, ಪಾದಚಾರಿ ಮಾರ್ಗ ನಿರ್ಮಾಣ ಸಹಿತ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಮೇಲ್ಸೇತುವೆ ಕಾಮಗಾರಿ ಮುಕ್ತಾಯಗೊಳ್ಳುವ ಮೊದಲು ತುರ್ತಾಗಿ ಕೈಗೊಳ್ಳಬೇಕೆಂದು ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯ ಪ್ರಮುಖರು ಸಂಸದರನ್ನು ಒತ್ತಾಯಿಸಿದರು.
ಮೇಲ್ಸೇತುವೆಯಲ್ಲಿ ಸಂಚರಿಸುವ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಪೂರಕವಾಗಿ ಉತ್ತರ ಮತ್ತು ದಕ್ಷಿಣದಲ್ಲಿ ಸಮಾನ ಅಂತರದ ವರೆಗೆ ಇಳಿಜಾರು ಹೆದ್ದಾರಿ ನಿರ್ಮಾಣವನ್ನು ಪುನರ್ಪರಿಶೀಲಿಸಿ ನಿರ್ಮಾಣ ಮಾಡುವಂತೆ ಆಗ್ರಹಿಸಿದರು.
ವೇದಿಕೆಯ ಸಂಚಾಲಕ ಭಾಸ್ಕರ ಶೆಟ್ಟಿ ಕಡೆಕಾರು ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಭೂ ಸ್ವಾಧೀನ ಮಾಡಿಕೊಂಡಿರುವ ಜಾಗದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಬೇಕು ಎಂದು ತಿಳಿಸಿದರು.
ಅದಕ್ಕೆ ಸ್ಪಂದಿಸಿದ ಸಂಸದರು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸಭೆಯನ್ನು ವಾರದೊಳಗೆ ಕರೆದು ಮನವಿಯಲ್ಲಿ ತಿಳಿಸಿರುವ ಎಲ್ಲಾ ವಿಷಯಗಳನ್ನು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಂತರಾಜ್ ಐತಾಳ್ ಅಂಬಲಪಾಡಿ, ಮನೋಹರ ಶೆಟ್ಟಿ ಅಂಬಲಪಾಡಿ, ಶ್ರೀಕಾಂತ್ ಶೆಟ್ಟಿ ಅಂಬಲಪಾಡಿ, ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಹರೀಶ್ ಶೆಟ್ಟಿ ಅಂಬಲಪಾಡಿ, ಯೋಗೀಶ್ ಶೆಟ್ಟಿ ಅಂಬಲಪಾಡಿ, ಶಿವಕುಮಾರ್ ಅಂಬಲಪಾಡಿ, ಕೀರ್ತಿ ಶೆಟ್ಟಿ ಅಂಬಲಪಾಡಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಅಜಿತ್ ಶೆಟ್ಟಿಗಾರ್ ಕಪ್ಪೆಟ್ಟು, ಸುನಿಲ್ ಕುಮಾರ್ ಕಪ್ಪೆಟ್ಟು, ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.