ಉಡುಪಿ: ಕುಡುಬಿ ಜನಾಂಗವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸದೃಢಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ಶಿಫಾರಸ್ಸಿನೊಂದಿಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಕುಡುಬಿ ಸಂಘದ ಮುಖಂಡರು ಹಾಗೂ ಶಾಸಕ ಕೆ.ರಘುಪತಿ ಭಟ್ ಗುರುವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.
ಕುಡುಬಿ ಜನಾಂಗದ ಆಚಾರ, ವಿಚಾರ, ಭಾಷೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ–ಗತಿ, ಭೌಗೋಳಿಕ ಅಂಶಗಳ ಕುರಿತು ಅಧ್ಯಯನ ನಡೆಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮನವಿ ಮಾಡಲಾಯಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಶ್ರೀರಾಮುಲು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಕುಡುಬಿ ಸಂಘದ ಅಧ್ಯಕ್ಷ ಎಂ.ಕೆ.ನಾಯಕ್, ಕೋಶಾಧಿಕಾರಿ ಗಣಪತಿ ನಾಯಕ್, ಉಡುಪಿ ಜಿಲ್ಲಾ ಉಪಾಧ್ಯಕ್ಷ ಸಿದ್ದಾರ್ಥ ನಾಯಕ್, ಪದಾಧಿಕಾರಿಗಳಾದ ನರಸಿಂಹ ನಾಯಕ್, ಸುರೇಂದ್ರ ನಾಯಕ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.