ADVERTISEMENT

ಪ್ರತಿ ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆ: ಸಚಿವ ಕೋಟ

ಕುಂದಾಪುರ ಕುಂಭಾಶಿಯಲ್ಲಿ ಬಿಜೆಪಿ ಬೂತ್ ವಿಜಯ ಅಭಿಯಾನ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 7:27 IST
Last Updated 11 ಜನವರಿ 2023, 7:27 IST
ಕುಂದಾಪುರ ಸಮೀಪದ ಕುಂಭಾಶಿಯಲ್ಲಿ ನಡೆದ ಬೂತ್ ವಿಜಯ ಅಭಿಯಾನದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಿರಣ್‌ಕುಮಾರ ಕೊಡ್ಗಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಶಂಕರ ಅಂಕದಕಟ್ಟೆ ಇದ್ದರು
ಕುಂದಾಪುರ ಸಮೀಪದ ಕುಂಭಾಶಿಯಲ್ಲಿ ನಡೆದ ಬೂತ್ ವಿಜಯ ಅಭಿಯಾನದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಿರಣ್‌ಕುಮಾರ ಕೊಡ್ಗಿ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಶಂಕರ ಅಂಕದಕಟ್ಟೆ ಇದ್ದರು   

ಕುಂದಾಪುರ: ‘ಪಕ್ಷದ ವಿವಿಧ ಸ್ತರದ ಜನಪ್ರತಿನಿಧಿಗಳು ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದು ಮುಂದಿನ ಮೂರು ತಿಂಗಳ ಒಳಗೆ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮಾಡಲಾಗುವುದು. ರಾಜ್ಯದ ಒಟ್ಟು 58ಸಾವಿರ ಬೂತ್‌ಗಳಲ್ಲಿ ಪಕ್ಷವನ್ನು ಸಮರ್ಥವಾಗಿ ಕಟ್ಟಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮರಳಿ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ’ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ಕುಂದಾಪುರ ಮಂಡಲದ ಕುಂಭಾಶಿ ಶಕ್ತಿ ಕೇಂದ್ರದ ಆಶ್ರಯದಲ್ಲಿ ಕುಂಭಾಶಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಎಸ್ ರಾವ್ ಅವರ ನಿವಾಸದಲ್ಲಿ ಮಂಗಳವಾರ ನಡೆದ ಬಿಜೆಪಿ ಬೂತ್ ವಿಜಯ್ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆ, ಪಕ್ಷದ ಪ್ರಮುಖರ ಯೋಜನೆ ಹಾಗೂ ಯೋಚನೆಗಳನ್ನು ಮತದಾರರಿಗೆ ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು.

ADVERTISEMENT

ಪಕ್ಷದ ಜೀವಾಳವಾಗಿರುವ ಕಾರ್ಯಕರ್ತರು ತಳಮಟ್ಟದವರೆಗೂ ಹೋಗಿ ಪಕ್ಷಕ್ಕೆ ಶಕ್ತಿ ನೀಡಿದಾಗ ಮಾತ್ರ ಬಲವರ್ಧನೆ ನಿರೀಕ್ಷಿತ ರೀತಿಯಲ್ಲಿ ಆಗುತ್ತದೆ. ಅಮಿತ್ ಶಾ ಅವರಂತಹ ಪಕ್ಷದ ನಾಯಕರು ಬೂತ್ ಮಟ್ಟದ ಕಾರ್ಯಕರ್ತರ ಮನೆಗೆ ತೆರಳಿ ಕುಶಲೋಪರಿ ವಿಚಾರಿಸುತ್ತಾರೆ. ಇಂತಹ ಸಜ್ಜನ ನಡವಳಿಕೆ ಇರುವವರನ್ನು ಪಕ್ಷ ಹೊಂದಿರುವುದರಿಂದ ಭವಿಷ್ಯದಲ್ಲಿ ಕೇರಳದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸ ಇದೆ. ಸಂಘಟನೆಯ ಆಧಾರದಲ್ಲಿ ಚುನಾವಣೆಗಳು ನಡೆಯುವುದರಿಂದಾಗಿ ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟುವ ಪ್ರಾಮಾಣಿಕ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಕುಂಭಾಶಿ ಮತಗಟ್ಟೆ ಸಂಖ್ಯೆ 80ರ ಬೂತ್ ಅಧ್ಯಕ್ಷ ಶ್ರೀನಿಧಿ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ಕುಮಾರ ಕೊಡ್ಗಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಬಿಜೆಪಿ ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಡಲ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಪ್ರಮುಖರಾದ ರಮೇಶ್ ನಾಯಕ್, ಯೋಗೀಶ್ ರಾವ್ ಮಾನೆ, ಮಂಜುನಾಥ ಕಾಮತ್ ಕುಂಭಾಶಿ ಇದ್ದರು.

ಕುಂದಾಪುರ ಬಿಜೆಪಿ ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಸ್ವಾಗತಿಸಿದರು.

ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ನಿರೂಪಿಸಿದರು. ಕುಂಭಾಶಿಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಎಸ್. ರಾವ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.