
ಶಿರ್ವ: ‘ಸಮಾಜದಲ್ಲಿ ಶೇ 60ರಷ್ಟು ಮಂದಿ ಉದ್ಯೋಗ ಅರಸಿ ಬರುತ್ತಿದ್ದು, ಆಧುನಿಕ ಪರಿಸ್ಥಿತಿಯಲ್ಲಿ ಸಾಕಷ್ಟು ವಿಪುಲ ಉದ್ಯೋಗಾವಕಾಶ ಕಲ್ಪಿಸಬೇಕಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಸಂಬಳದ ಬಗ್ಗೆ ಚಿಂತಿಸದೆ ಉದ್ಯೋಗ ಪಡೆದು ಅನುಭವ ಹೆಚ್ಚಿಸಿಕೊಳ್ಳಬೇಕಾದ ಅವಶ್ಯಕತೆಯಿದೆ’ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದರು.
ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಕುಂತಳನಗರ ಉಡುಪಿ ಗ್ರಾಮೀಣ ಬಂಟರ ಸಂಘದ ಆಶಾ ಪ್ರಕಾಶ್ ಶೆಟ್ಟಿ ಕನ್ವೆಂಷನ್ ಸೆಂಟರ್ ಹಾಗೂ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಸಭಾಭವನದಲ್ಲಿ ನಡೆದ ‘ಉದ್ಯೋಗ ಮೇಳ’ವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಮುಖಂಡ ವಿನಯ್ಕುಮಾರ್ ಸೊರಕೆ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಯುವಜನರ ಉಜ್ವಲ ಭವಿಷ್ಯಕ್ಕೆ ಹಾದಿ ಮಾಡಿಕೊಟ್ಟಿರುವುದು ಶ್ಲಾಘನೀಯ ಎಂದರು.
ಮುಖಂಡ ಪ್ರಮೋದ್ ಮಧ್ವರಾಜ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಯೋಗೀಶ್ ಶೆಟ್ಟಿ, ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ವಿಜಯ ಹೆಗ್ಡೆ, ಉದ್ಯಮಿ ಹರಿಪ್ರಸಾದ್ ಶೆಟ್ಟಿ, ನವೀನ್ಚಂದ್ರ ಜೆ.ಶೆಟ್ಟಿ, ಎಂ.ಆರ್.ಜಿ ಗ್ರೂಪ್ನ ಈಶ್ವರ್ ಪ್ರಸಾದ್ ಶೆಟ್ಟಿ, ಕೊಚ್ಚಿನ್ ಶಿಪ್ ಯಾರ್ಡ್ ಸಿಇಒ ಹರಿಕುಮಾರ್, ಕಾಪು ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೈ ಸುಕುಮಾರ್, ಪ್ರಾಂಶುಪಾಲ ಶರತ್ ಆಳ್ವ, ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಎಚ್.ಬಿ.ಶೆಟ್ಟಿ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಕೋಶಾಧಿಕಾರಿ ವಿಜಿತ್ ಶೆಟ್ಟಿ, ಪದ್ಮನಾಭ ಹೆಗ್ಡೆ, ರಂಜನಿ ಹೆಗ್ಡೆ, ದಯಾನಂದ ಶೆಟ್ಟಿ ಇದ್ದರು.
ಉದ್ಯೋಗ ಮೇಳದ ರುವಾರಿ, ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಸ್ವಾಗತಿಸಿದರು. ಜಾಬ್ಫೇರ್ ಮುಖ್ಯಸ್ಥೆ ದಿವ್ಯರಾಣಿ ಪ್ರದೀಪ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯದ ವಿವಿಧೆಡೆಗಳಿಂದ ಅಭ್ಯರ್ಥಿಗಳು ಉದ್ಯೋಗ ಅರಸಿ ಮೇಳದಲ್ಲಿ ಪಾಲ್ಗೊಂಡಿದ್ದು, ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಸಕಲ ಸೌಕರ್ಯ ಒದಗಿಸಲಾಗಿತ್ತು. ಉದ್ಯೋಗ ಮೇಳದಲ್ಲಿ 40ಕ್ಕೂ ಅಧಿಕ ಕಂಪನಿಗಳು ಪಾಲ್ಗೊಂಡಿದ್ದು, ಒಂದು ಸಾವಿರಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳ ನೆರವೇರಿತು. ಮೇಳದಲ್ಲಿ ಅರ್ಹತೆ ಮೇರೆಗೆ ಅನೇಕರು ಕೆಲವು ಕಂಪನಿಗಳಲ್ಲಿ ನೇರ ಸಂದರ್ಶನದ ಮೂಲಕ ಕೆಲಸ ಗಿಟ್ಟಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.