ಉಡುಪಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿನ ಭೀತಿಯಿಂದ ಹತಾಶ ಮನೋಭಾವದಲ್ಲಿ ಬೇಕಾಬಿಟ್ಟಿ ಭಾಗ್ಯಗಳನ್ನು ಘೋಷಿಸಲು ಹೊರಟಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಟೀಕಿಸಿದ್ದಾರೆ.
ಸಿದ್ದರಾಮಯ್ಯಗೆ ಹಿಂದೂಗಳ ಕಂಡರೆ ಭಯ. ಜಿಹಾದಿಗಳ ಕಂಡರೆ ಪ್ರೀತಿ. ಉಡುಪಿಯಲ್ಲಿ ನಡೆದ ಪ್ರಜಾ ಧ್ವನಿ ಸಮಾವೇಶ ಪ್ರಜಾ ವಿರೋಧಿ ಸಮಾವೇಶವಾಗಿದೆ. ಸೋಲಿನ ಭಯದಿಂದ ಜನತೆಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ.
ಕರಾವಳಿ ಜಿಲ್ಲೆಗಳ ಜನತೆ ಪ್ರಬುದ್ಧ, ಪ್ರಜ್ಞಾವಂತರಾಗಿದ್ದು ರಾಜ್ಯವನ್ನು ದಿವಾಳಿಯ ಅಂಚಿಗೆ ಕೊಂಡೊಯ್ಯುವ ತಲೆ ಬುಡವಿಲ್ಲದ ಭಾಗ್ಯಗಳಿಗೆ ಮರುಳಾಗುವುದಿಲ್ಲ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ.
ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ತಳೆದಿರುವ ಕಾಂಗ್ರೆಸ್ನಿಂದ ಜಿಲ್ಲೆಯ ಜನರಿಗೆ ಉಪದೇಶ ಬೇಕಿಲ್ಲ. ಕರಾವಳಿ ಬಿಜೆಪಿಯ ಭದ್ರ ಕೋಟೆಯಾಗಿದ್ದು ಕಾಂಗ್ರೆಸ್ ಹಾಗೂ ಇತರ ಪಕ್ಷಗಳಿಗೆ ಜನತೆ ಮಣೆ ಹಾಕುವುದಿಲ್ಲ. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರು ಮೆಚ್ಚಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಕುಯಿಲಾಡಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.