ADVERTISEMENT

ಮಿಥುನ್ ರೈ ಬಾಲಿಷ ಹೇಳಿಕೆ: ಕುಯಿಲಾಡಿ ಸುರೇಶ್ ನಾಯಕ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 14:39 IST
Last Updated 28 ಸೆಪ್ಟೆಂಬರ್ 2022, 14:39 IST
ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ   

ಉಡುಪಿ: ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ರಾಜಕಾರಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಟೀಕಿಸಿದ್ದಾರೆ.

ಕಾರ್ಯಕ್ಷಮತೆಯಿಂದ‌ ಪ್ರಧಾನಿ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆ ವಿರುದ್ಧ ಅಪ್ರಬುದ್ಧ ರಾಜಕಾರಣಿ ಮಿಥುನ್ ರೈ‌ ಬಾಲಿಷ ಹೇಳಿಕೆ ನೀಡಿರುವುದು ಖಂಡನೀಯ. ರಾಜ್ಯದಲ್ಲಿ ಸಚಿವೆಯಾಗಿ ಉತ್ತಮ ಕೆಲಸ ಮಾಡಿರುವ, ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿರುವ ಶೋಭಾ ಅವರ ಕಾರ್ಯಗಳ ಕುರಿತು ಚರ್ಚಿಸಲು ಬಿಜೆಪಿ ಸಿದ್ಧವಿದೆ. ಮಿಥುನ್ ರೈ ಅವರಿಗೆ ಆಸಕ್ತಿ ಇದ್ದರೆ ನೇರ ಚರ್ಚೆಗೆ ಬರಲಿ. ಪುಕ್ಕಟೆ ಪ್ರಚಾರಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.

ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಸುದೀರ್ಘ ಅವಧಿಗೆ ಸಂಸದರಾಗಿದ್ದ ಕಾಂಗ್ರೆಸ್ ಪಕ್ಷದ ದುರೀಣರು ಉಡುಪಿಗೆ ನೀಡಿರುವ ಕೊಡುಗೆಗಳು ಏನು ಎಂಬ ಬಗ್ಗೆಯೂ ಮಿಥುನ್ ರೈ ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ಪ್ರಾಯೋಜಿತ ಶೇ 40 ಕಮಿಷನ್ ಬಗ್ಗೆ ಮಾತನಾಡಲು ಕಾಂಗ್ರೆಸ್‌ ಮುಖಂಡಿಗೆ ನೈತಿಕತೆ ಇಲ್ಲ.

ADVERTISEMENT

ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರ, ಯಾರಿಗೆ ಕಮಿಷನ್ ಸಂದಾಯವಾಗುತ್ತಿತ್ತು ಎಂಬುದು ಜಗಜ್ಜಾಹೀರಾಗಿದೆ. ಮಿಥುನ್ ರೈ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವ ಕೆಲಸ ಮಾಡಬಾರದು ಎಂದು ಕುಯಿಲಾಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.