ಶಿರ್ವ: ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣೆ ಆಯೋಗವು ಮತದಾರರ ಜಾಗೃತಿಗಾಗಿ ಕಾಪು ವಿಧಾನಸಭಾ ಕ್ಷೇತ್ರದ 209 ಮತಗಟ್ಟೆಗಳಲ್ಲಿ ಭಾನುವಾರ ಬೆಳಿಗ್ಗೆ ಏಕಕಾಲಕ್ಕೆ ‘ನಮ್ಮ ನಡೆ ಮತಗಟ್ಟೆಯ ಕಡೆ’ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಾಪು ತಹಶೀಲ್ದಾರ್ ಪ್ರತಿಭಾ ಆರ್, ‘ಮತದಾನದ ಪ್ರಮಾಣ ಹೆಚ್ಚಿಸುವ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.
ಸಹಾಯಕ ಚುನಾವಣಾಧಿಕಾರಿ ಜಯಮಾಧವ ಮಾತನಾಡಿ, ‘ಪ್ರತಿಯೊಬ್ಬರೂ ತಮ್ಮ ಮತದ ಮೌಲ್ಯ ಅರಿತು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳುವ ಮೂಲಕ ಸದೃಢ ಹಾಗೂ ಬಲಿಷ್ಟ ದೇಶ ಕಟ್ಟುವಂತಾಗಲಿ’ ಎಂದರು.
ಉಡುಪಿ–ಚಿಕ್ಕಮಗಳೂರು ಲೋಕಸಭೆ ಚುನಾವಣೆಯ ಏ. 26ರಂದು ನಡೆಯಲಿದ್ದು, ‘ನಮ್ಮ ನಡೆ ಮತಗಟ್ಟೆಯ ಕಡೆ’ಯ ಮೂಲಕ ಪ್ರತಿ ಮತಗಟ್ಟೆಯನ್ನು ಜನರಿಗೆ ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶ. ಮತದಾರರನ್ನು ಸೆಳೆಯಲು ಜನಪದ, ಸಾಂಸ್ಕೃತಿಕ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗುತ್ತಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮೋಹನ್, ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಹಾಗೂ ಬಿಎಲ್ಒಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ವಿಶೇಷತೆಗಳು
-ನೈತಿಕ ಚುನಾವಣೆಯ ಕುರಿತು ಮತದಾರರಿಗೆ ಭಿತ್ತಿ ಚಿತ್ರಗಳ ವಿತರಣೆ
-ಎಲ್ ಇ ಡಿ ವಾಹನಗಳ ಮೂಲಕ ಜಾಗೃತಿ
-ಮತದಾನದ ಮಹತ್ವದ ಕುರಿತು ಬೀದಿ ನಾಟಕ
-ಸೈಕಲ್ ದ್ವಿಚಕ್ರ ವಾಹನ ಮತ್ತು ಕಾಲ್ನಡಿಗೆ ಜಾಥಾ
–ಸಿ-ವಿಜಿಲ್, ಕೆವೈಸಿ, ಸಕ್ಷಮ್ ಆಪ್, ಮತದಾರರ ಸಹಾಯವಾಣಿ 1950 ಬಗ್ಗೆ ಮಾಹಿತಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.