ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಶೋಧ ಕಾರ್ಯ ನಡೆಸಿದ್ದಾರೆ.
‘ಎರಡು ಮನೆ ಮತ್ತು ವಿವಿಧ ಸರ್ವೆ ನಂಬರ್ಗಳಲ್ಲಿ ಮೂರು ನಿವೇಶನ, ಚಿನ್ನ, ಬೆಳ್ಳಿ, ಗೃಹೋಪಯೋಗಿ ವಸ್ತುಗಳು ಹಾಗೂ ಬ್ಯಾಂಕ್ ಖಾತೆಗಳ ಹಣ ಸೇರಿದಂತೆ ಒಟ್ಟು ₹2.21 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
‘ಸುಮಾರು ಒಂದೂವರೆ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ’ ಎಂದು ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಮಂಜುನಾಥ ತಿಳಿಸಿದರು.
‘ಲಕ್ಷ್ಮೀನಾರಾಯಣ ಅವರ ಮನೆ, ಕಚೇರಿ, ಸಂಬಂಧಿಕರ ಮನೆ ಹಾಗೂ ಆಪ್ತರಾದ ರವಿ ಶೇರಿಗಾರ್ ಎಂಬುವವರ ಮನೆಗಳಲ್ಲೂ ಶೋಧಕಾರ್ಯ ನಡೆಸಲಾಗಿದೆ. ಐದು ತಂಡ ರಚಿಸಿ, ಐದು ಕಡೆಗಳಲ್ಲಿ ಶೋಧ ನಡೆಸಲಾಗಿದೆ. ದಾಖಲೆಗಳ ಪರಿಶೀಲನೆ ಮುಂದುವರಿದಿದೆ’ ಎಂದಿದ್ದಾರೆ.
ಲಕ್ಷ್ಮೀನಾರಾಯಣ ಅವರು ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದು, ಪ್ರಸ್ತುತ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್ಪಿಗಳಾದ ಗಾನ ಪಿ. ಕುಮಾರ್, ಧನ್ಯಾ ನಾಯಕ್ ನೇತೃತ್ವದ ತಂಡ ಶೋಧಕಾರ್ಯ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.