
ಉಡುಪಿ: ಹನ್ನೆರಡನೆಯ ಶತಮಾನವನ್ನು ವಚನ ಕ್ರಾಂತಿಯುಗ ಎನ್ನಲಾಗುತ್ತಿದ್ದು, ಅಂದಿನ ಕಾಲಘಟ್ಟದಲ್ಲಿ ಶಿವಶರಣೆಯರು ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಶ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ವಚನಗಳನ್ನು ರಚಿಸುವ ಮೂಲಕ ಜನಸಾಮಾನ್ಯರು ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.
ನಗರದ ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ಶ್ರೀ ಮಹಾಯೋಗಿ ವೇಮನ ಹಾಗೂ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿವಶರಣರು ಪ್ರತಿಪಾದಿಸಿದ ವಚನ ಸಾರಗಳು ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿವೆ ಎಂದರು.
ನೇರ ನಿಷ್ಠುರವಾದಿಯಾಗಿ ಸಮ ಸಮಾಜ ನಿರ್ಮಾಣವನ್ನು ಪ್ರತಿಪಾದಿಸಿದ ಅಂಬಿಗರ ಚೌಡಯ್ಯ ಹಾಗೂ ಮಹಾಯೋಗಿ ವೇಮನ ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ಮಾದರಿಯಾಗಿದೆ. ಶಿವಶರಣರ ವಚನಗಳ ಸಾರವನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ನಮ್ಮಲ್ಲಿ ಅಡಗಿರುವ ಅಜ್ಞಾನದ ಕತ್ತಲನ್ನು ಹೋಗಲಾಡಿಸಿಕೊಂಡು ಸನ್ಮಾರ್ಗದ ಹಾದಿಯಲ್ಲಿ ಸಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಅಂಬಿಗರ ಚೌಡಯ್ಯ ಅವರು 12ನೇ ಶತಮಾನದಲ್ಲಿಯೇ ಜಾತೀಯತೆ, ಮೌಢ್ಯತೆ ವಿರೋಧಿಸಿದ್ದರು. ವಿಭಿನ್ನ ವ್ಯಕ್ತಿತ್ವದ ಶ್ರೇಷ್ಠ ವಚನಕಾರರಾದ ಅವರ ತತ್ವ, ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಒಬ್ಬ ವ್ಯಕ್ತಿಯ ಜೀವನ ಕೇವಲ ಕ್ಷಣಮಾತ್ರದಲ್ಲಿ ಬದಲಾಗಲು ಸಾಧ್ಯವಿಲ್ಲ. ಆ ಕ್ಷಣದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ನಮ್ಮ ಜೀವನದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಗುರಿ ಸಾಧನೆ ಕಡೆಗೆ ಗಮನಹರಿಸಬೇಕು. ಮನಸ್ಸಿನ ಮಾತಿಗಿಂತ ಮಿದುಳಿನ ಮಾತನ್ನು ಆಲಿಸಬೇಕು ಎಂದು ಹೇಳಿದರು.
ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಂ.ಆರ್. ಉಪನ್ಯಾಸ ನೀಡಿ, 12 ನೇ ಶತಮಾನದಲ್ಲಿ ವಚನ ಚಳುವಳಿಯ ಕ್ರಾಂತಿಯಿಂದಾಗಿ, ಲಿಂಗ ತಾರತಮ್ಯ, ಜಾತೀಯತೆ, ಅಂಧ ಆಚರಣೆಗಳನ್ನು ಮೀರಿ ಜನಸಾಮಾನ್ಯರಿಗೆ ಸಮಾನತೆಯನ್ನು ನೀಡಿದವರು ಬಸವಣ್ಣನವರು. ಪ್ರತಿಯೊಬ್ಬರೂ ತಮ್ಮ ಅನುಭವಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಮೂಲಕ ಬದುಕಿನ ಸರಿ-ತಪ್ಪುಗಳನ್ನು ಅರಿತು ತಿದ್ದುಪಡಿಮಾಡಿಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟವರು ಅಂದಿನ ಕಾಲದ ವಚನಕಾರರು ಎಂದರು.
ಆಂಧ್ರಪ್ರದೇಶದ ಕವಿಯಾದ ಮಹಾಯೋಗಿ ವೇಮನರು ಜನತಾ ಕವಿಯಾಗಿ ಸಮಾಜದ ಜನರ ಮನೋಭಾವದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಸಮಾಜದಲ್ಲಿ ಕಂಡ ಅಸಮಾನತೆ, ಅಂಧಶ್ರದ್ದೆಗಳನ್ನು ಸತ್ಯಭರಿತವಾದ ಸರಳ ಭಾಷೆಯಲ್ಲಿ ಹಾಡಿ, ಅರಿವಿನ ಬೀಜ ಬಿತ್ತಿದವರು ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವರ್ಷಾ ಬಿ. ಕೋಟ್ಯಾನ್ ನಿರೂಪಿಸಿದರು. ವಳಕಾಡು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಕೆ. ಪೂರ್ಣಿಮಾ ವಂದಿಸಿದರು.
ಸಮಾಜದಲ್ಲಿ ಕವಿದಿದ್ದ ಅಂಧಕಾರ ತೊಡೆದುಹಾಕಲು ಜ್ಞಾನದ ದೀವಿಗೆ ಹಿಡಿದು ಸಮಾಜ ಸುಧಾರಣೆಗೆ ಅವಿರತ ಶ್ರಮಿಸಿದ್ದ ಸಮಾಜ ಸುಧಾರಕ ಮಹಾಯೋಗಿ ವೇಮನರಂತಹ ಮಹನೀಯರ ಆದರ್ಶ ಪ್ರತಿಯೊಬ್ಬರಿಗೂ ದಾರಿದೀಪಅಬೀದ್ ಗದ್ಯಾಳ್ ಹೆಚ್ಚುವರಿ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.