ಕುಂದಾಪುರ: ‘ಮಹಾಂತ ಶಿವಯೋಗಿ ಸ್ವಾಮೀಜಿ ಅವರು 1975ರಿಂದ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಗೊಂಡಿದ್ದ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾದದ್ದು’ ಎಂದು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಹೇಳಿದರು.
ತಾಲ್ಲೂಕು ಆಡಳಿತ, ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
‘ಬಟ್ಟೆಯ ಚೀಲದ ಜೋಳಿಗೆ ಹಿಡಿದು ವ್ಯಸನಮುಕ್ತ ಸಮಾಜಕ್ಕಾಗಿ ಮನೆ ಮನೆಗೆ ತೆರಳಿ ಮದ್ಯಪಾನ, ತಂಬಾಕು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳ ಬಗ್ಗೆ, ಜನರಿಗೆ ಮನಮುಟ್ಟುವಂತೆ ತಿಳುವಳಿಕೆ ನೀಡಿ ಮನಪರಿವರ್ತನೆ ಮಾಡಿದ ಮಹಾನ್ ವ್ಯಕ್ತಿ ಅವರು’ ಎಂದು ಬಣ್ಣಿಸಿದರು.
ಸಂಪನ್ಮೂಲ ವ್ಯಕ್ತಿ, ಜಿಲ್ಲಾ ಜನಜಾಗೃತಿ ವೇದಿಕೆಯ ಪ್ರಮುಖ ಸುಬ್ರಹ್ಮಣ್ಯ ಶೆಟ್ಟಿ ಅವರು, ದುರ್ವ್ಯಸನಗಳು, ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಅವರಲ್ಲಿನ ದುಶ್ಚಟಗಳನ್ನೇ ಭಿಕ್ಷೆಯ ರೂಪದಲ್ಲಿ ಜೋಳಿಗೆಯಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದ ಮಹಾಂತ ಶಿವಯೋಗಿಗಳ ನಡೆ ಯುವಕರಿಗೆ ಮಾರ್ಗದರ್ಶನ, ದಾರಿ ದೀಪವಾಗಬೇಕು ಎಂದರು.
ತಾಲ್ಲೂಕು ಆರೋಗ್ಯಧಿಕಾರಿ ಡಾ.ಪ್ರೇಮಾನಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾತನಾಡಿದರು. ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ನಾಗರಾಜ ವೈದ್ಯ ಎಂ, ಐಕ್ಯುಎಸಿ ಸಂಚಾಲಕ ನಾಗರಾಜ ಯು. ಉಪನ್ಯಾಸಕ ರಂಜಿತ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉಪನ್ಯಾಸಕ ಶೇಖರ ಬಿ. ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.