ADVERTISEMENT

ಸಾಮೂಹಿಕ ವಿವಾಹ: ಸಿದ್ಧತೆಗೆ ಸೂಚನೆ

ದೇವಾಲಯಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2020, 16:12 IST
Last Updated 24 ಜನವರಿ 2020, 16:12 IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಸಾಮೂಹಿಕ ವಿವಾಹ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ನೇತೃತ್ವದಲ್ಲಿ ಸಾಮೂಹಿಕ ವಿವಾಹ ಪೂರ್ವಭಾವಿ ಸಭೆ ನಡೆಯಿತು.   

ಉಡುಪಿ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಏ.26ರಂದು ಸಾಮೂಹಿಕ ವಿವಾಹ ನಡೆಯಲಿದ್ದು, ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಸಂಬಂದಪಟ್ಟ ದೇವಾಲಯಗಳ ಮುಖ್ಯಸ್ಥರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸಾಮೂಹಿಕ ವಿವಾಹದಲ್ಲಿ ಭಾಗವಹಿಸುವ ವಧುವಿಗೆ 8 ಗ್ರಾಂ ಚಿನ್ನದ ತಾಳಿ ಹಾಗೂ ಚಿನ್ನದ ಗುಂಡುಗಳನ್ನು ಕೊಡಬೇಕು. ಇದಕ್ಕಾಗಿ ಚಿನ್ನವನ್ನು ಖರೀದಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ನಿಯಮದಂತೆ ಟೆಂಡರ್ ಕರೆದು ಖರೀದಿಸಬೇಕು ಎಂದು ಸೂಚಿಸಿದರು.

ಸ್ಥಳೀಯ ಸಂಪ್ರದಾಯಕ್ಕೆ ತಕ್ಕಂತೆ ತಾಳಿಯ ಮಾದರಿಯನ್ನು ವಿನ್ಯಾಸಗೊಳಿಸಬೇಕು. ಖರೀದಿಸುವ ಚಿನ್ನವು ಕಡ್ಡಾಯವಾಗಿ 22 ಕ್ಯಾರೆಟನದ್ದಾಗಿದ್ದು, 916 ಹಾಲ್ ಮಾರ್ಕ್ ಹೊಂದಿರುವ ಬಗ್ಗೆ ದೃಢೀಕರಣ ಪತ್ರ ಪಡೆಯಬೇಕು ಎಂದು ಸೂಚಿಸಿದರು.

ADVERTISEMENT

ಸಾಮೂಹಿಕ ವಿವಾಹ ಕುರಿತಂತೆ ದೇವಾಲಯಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡಲಾಗುವ ಸಹಾಯ ಧನವನ್ನು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಏ.26 ರಂದು ನಡೆಯುವ ಸಾಮೂಹಿಕ ವಿವಾಹಕ್ಕೆ ಪೂರ್ವಭಾವಿಯಾಗಿ ಮಾರ್ಚ್ 27ರವರೆಗೆ ವಧು ವರರ ನೋಂದಣಿ ಮಾಡಿಕೊಂಡು, ಏ.1ರಂದು ನೋಂದಾಯಿತ ವಧು–ವರರ ವಿವರಗಳನ್ನು ದೇವಾಲಯದಲ್ಲಿ ಪ್ರಕಟಿಸಬೇಕು. ಪ್ರಕಟಿತ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಏ.6ವರೆಗೆ ಗಡುವ ನೀಡಿ, 11 ರಂದು ಅಂತಿಮ ವಧು-ವರರ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ರವಿಕುಮಾರ್, ಧಾರ್ಮಿಕ ಧತ್ತಿ ಇಲಾಖೆಯ ತಹಸೀಲ್ದಾರ್ ಸುಧಾಕರ್, ಸಾಮೂಹಿಕ ವಿವಾಹ ಏರ್ಪಡಿಸುವ ದೇವಾಲಯಗಳ ಕಾರ್ಯನಿರ್ವಹಣಾಧಿಕಾರಿಗಳು, ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.