ಉಡುಪಿ: 2021ರ ಶಿಕ್ಷಕರ ಅರ್ಹತಾ ಪರೀಕ್ಷೆಯು ಆ.22ರಂದು ನಡೆಯಲಿದ್ದು, ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತ ಸಭೆಯಲ್ಲಿ ಮಾತನಾಡಿ, 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಿಗ್ಗೆ 1,176 ಮತ್ತು ಮಧ್ಯಾಹ್ನ 1,848 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ಬರುವವವರಿಗೆ ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಬೇಕು. ಮಾಸ್ಕ್ ಧರಿಸುವಂತೆ ಕ್ರಮ ಕೈಗೊಳ್ಳುಬೇಕು ಎಂದರು.
ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪ್ರಶ್ನೆಪತ್ರಿಕೆ ಸಾಗಾಟ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಹೆಚ್ಚಿನ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಹಾಯವಾಗುವ ನಿಟ್ಟಿನಲ್ಲಿ ಮುಂದಿನ ವರ್ಷದಿಂದ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಡಿಡಿಪಿಐ ಎನ್.ಎಚ್. ನಾಗೂರ, ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.