ADVERTISEMENT

ಸಹಕಾರಿಗಳು ಒಟ್ಟಾಗಿ ಸಹಕಾರ ಕ್ಷೇತ್ರ ಬಲಪಡಿಸಿ: ಶಾಸಕ ಕೆ.ರಘುಪತಿ ಭಟ್

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 14:30 IST
Last Updated 14 ನವೆಂಬರ್ 2020, 14:30 IST
67ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉಡುಪಿಯ ಟಿಎಂಎ ಪೈ ಆಸ್ಪತ್ರೆಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಅವರಿಗೆ ಸನ್ಮಾನ ಮಾಡಲಾಯಿತು.
67ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉಡುಪಿಯ ಟಿಎಂಎ ಪೈ ಆಸ್ಪತ್ರೆಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಅವರಿಗೆ ಸನ್ಮಾನ ಮಾಡಲಾಯಿತು.   

ಉಡುಪಿ: ಕೋವಿಡ್‌ನಿಂದಾಗಿ ಎಲ್ಲ ಕ್ಷೇತ್ರಗಳಿಗೂ ಸಂಕಷ್ಟ ಎದುರಾಗಿದ್ದು, ಸಹಕಾರಿಗಳು ಒಟ್ಟಾಗಿ ಸಹಕಾರಿ ಕ್ಷೇತ್ರವನ್ನು ಬಲಗೊಳಿಸಬೇಕಿದೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಕೆನರಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಪರ್ಕಳ ಶ್ರೀದುರ್ಗಾಪರಮೇಶ್ವರಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಶನಿವಾರ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ಪ್ರವಾಸೋದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಮೇಲೆತ್ತಲು ಸರ್ಕಾರ ಆದ್ಯತೆ ನೀಡುತ್ತಿದೆ. ಕೆಲವೇ ವರ್ಷಗಳಲ್ಲಿ ಭಾರತ ಆರ್ಥಿಕತೆಯಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಉಡುಪಿಯ ಟಿಎಂಎ ಪೈ ಆಸ್ಪತ್ರೆಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಹಾಗೂ ಉಡುಪಿ ತಾಲ್ಲೂಕು ಆರೋಗ್ಯಾಧಿಕಾರಿ ನಾಗರತ್ನ ಅವರನ್ನು ಸನ್ಮಾನಿಸಲಾಯಿತು. ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಉಪ ನಿರ್ದೇಶಕ ಎಂ.ಎಚ್.ವಿಠ್ಠಲ ಸೇರಿಗಾರ್, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಇದ್ದರು.

ಕೆನರಾ ಸೊಸೈಟಿ ಅಧ್ಯಕ್ಷ ಯು.ಮೋಹನ್ ಉಪಾಧ್ಯ ಸ್ವಾಗತಿಸಿದರು. ಶ್ರೀದುರ್ಗಾಪರಮೇಶ್ವರಿ ಸೊಸೈಟಿಯ ಸಿಇಒ ನಿತ್ಯಾನಂದ ಪರ್ಕಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.