ಉಡುಪಿ: ನೆರೆ ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ 19 ಗ್ರಾಮ ಪಂಚಾಯಿತಿಗಳಲ್ಲಿ ತೋಡುಗಳ ನಿರ್ವಹಣೆ ಸಹಿತ ತುರ್ತು ಕಾಮಗಾರಿಗಳಿಗೆ ತಲಾ ₹10 ಲಕ್ಷ ಅನುದಾನ ನೀಡುವಂತೆ ಶಾಸಕ ಯಶ್ಪಾಲ್ ಸುವರ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಉಡುಪಿ ತಾಲ್ಲೂಕಿನ 6 ಗ್ರಾಮ ಪಂಚಾಯಿತಿಗಳ ಮತ್ತು ಬ್ರಹ್ಮಾವರ ತಾಲ್ಲೂಕಿನ 13 ಗ್ರಾಮ ಪಂಚಾಯಿತಿಗಳ (ಒಟ್ಟು 19 ಗ್ರಾಮ ಪಂಚಾಯಿತಿಗಳು) ಜನವಸತಿ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಸ್ಥಳೀಯಾಡಳಿತ ಅನುದಾನದ ಕೊರತೆಯಿಂದ ರಸ್ತೆ ಬದಿಯಲ್ಲಿನ ತೋಡುಗಳ ಹೂಳೆತ್ತದೆ, ಸಮರ್ಪಕ ನಿರ್ವಹಣೆಯಿಲ್ಲದೆ ಧಾರಾಕಾರ ಮಳೆಗೆ ನೆರೆ ಉಂಟಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ತೋಡು, ಚರಂಡಿಗಳಲ್ಲಿ ಹೂಳು ತುಂಬಿದ್ದು, ಇದರಿಂದ ಕೃಷಿ ಭೂಮಿಗೆ ನೀರು ನುಗ್ಗಿ ರೈತರಿಗೆ ತೊಂದರೆಯಾಗಿದೆ. ರಸ್ತೆಗಳ ಮೇಲೆ ನೀರು ಹರಿಯುವುದರಿಂದ ರಸ್ತೆಗಳು ಕಿತ್ತುಹೋಗಿ, ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ ಎಂದೂ ಪತ್ರದಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.