ADVERTISEMENT

ಮರಳಿನ ಸಮಸ್ಯೆಗೆ ಶಾಸಕರೇ ಕಾರಣ: ಕಾಂಗ್ರೆಸ್‌ ಆರೋಪ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2018, 13:18 IST
Last Updated 12 ಡಿಸೆಂಬರ್ 2018, 13:18 IST
ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಯ ಕುರಿತು ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಯ ಕುರಿತು ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.   

ಉಡುಪಿ: ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಯ ಕುರಿತು ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.

ಹಿಂದೆ, ಪ್ರಮೋದ್ ಮಧ್ವರಾಜ್‌ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಜಿಲ್ಲಾಧಿಕಾರಿ ಮೇಲೆ ಒತ್ತಡ ಹೇರಿ 165 ಮಂದಿಗೆ ಪರವಾನಗಿ ಕೊಡಿಸಲಾಗಿತ್ತು. 28 ಬ್ಲಾಕ್‌ಗಳಲ್ಲಿ 9 ಲಕ್ಷ ಟನ್ ಮರಳು ತೆಗೆಯಲು ಅವಕಾಶ ಸಿಕ್ಕಿತ್ತು. ಆದರೆ ಈಗ ಜನರಿಗೆ ಮರಳು ಸಿಗುತ್ತಿಲ್ಲ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದರು.

ರಘುಪತಿ ಭಟ್‌ ಅವರು ಚುನಾವಣೆ ಸಂದರ್ಭ ಶಾಸಕನಾದರೆ ತಿಂಗಳಲ್ಲಿ ಮರಳು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಶಾಸಕರಾಗಿ ಆರು ತಿಂಗಳು ಕಳೆದರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಶಾಸಕರು ಜನರಿಗೆ ಮರಳು ನೀಡಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಉಡುಪಿ, ಬ್ರಹ್ಮಾವರ ವ್ಯಾಪ್ತಿಯ ಸಿ.ಆರ್.ಝೆಡ್. ವ್ಯಾಪ್ತಿಯಲ್ಲಿ 5 ಮರಳು ದಿಬ್ಬಗಳ ತೆರವಿಗೆ ಜಿಲ್ಲಾಡಳಿತ ಪರವಾನಗಿ ನೀಡಿದೆ. 45 ಮಂದಿಯ ಪೈಕಿ 11 ಮಂದಿಗೆ ಪರವಾನಗಿ ನೀಡಲಾಗಿದೆ. ಪರವಾನಗಿ ಪಡೆದವರು ಮರಳು ತೆಗೆಯದಂತೆ ಒತ್ತಡ ಹಾಕಲಾಗುತ್ತದೆ ಎಂದು ಆರೋಪಿಸಿದರು.

ಶಾಸಕರು ತಮ್ಮ ಬೆಂಬಲಿಗರ ಮೂಲಕ ಮರಳು ತೆಗೆಯದಂತೆ ತಡೆಯೊಡ್ಡುತ್ತಿರುವುದು ಖಂಡನೀಯ. ಜನರಿಗೆ, ಕಟ್ಟಡ ಕಾರ್ಮಿಕರಿಗೆ ಮರಳು ಸಿಗಬೇಕು. ತಕ್ಷಣ ಮರಳು ತೆಗೆಯುವ ಪ್ರಕ್ರಿಯೆ ಆರಂಭವಾಗಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ಸಭೆಯಲ್ಲಿ ಮುಖಂಡರಾದ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ, ಹಿಂದುಳಿದ ವರ್ಗ ಘಟಕದ ಅಧ್ಯಕ್ಷ ಯತೀಶ್ ಕರ್ಕೆರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಉಡುಪಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಎಸ್.ಸಿ. ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ, ಎಸ್.ಟಿ. ಘಟಕದ ಅಧ್ಯಕ್ಷ ಅನಂತ್ ನಾಯ್ಕ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.