ಉಡುಪಿ: ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕಾತಿ ಸಂದರ್ಭದಲ್ಲಿ ಅರ್ಹತೆಯ ಆಧಾರದಲ್ಲಿ ಶೇ 3ರಷ್ಟು ಮೀಸಲಾತಿಯನ್ನು ಪೌರಕಾರ್ಮಿಕರಿಗೆ ನೀಡಲಾಗುತ್ತಿದ್ದು, ಪೌರ ಕಾರ್ಮಿಕರು ‘ಸಿ’ ಗ್ರೂಪ್ ನೌಕರರಾಗಿ ಭಡ್ತಿ ಹೊಂದುವ ಅವಕಾಶಗಳಿವೆ. ಜಿಲ್ಲಾಡಳಿತ ಈಚೆಗೆ ಬಡ್ತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.
ಶುಕ್ರವಾರ ಅಜ್ಜರಕಾಡು ಪುರಭವನದಲ್ಲಿ ನಗರಸಭೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪೌರ ಕಾರ್ಮಿಕನಾಗಿ ಕರ್ತವ್ಯಕ್ಕೆ ಸೇರ್ಪಡೆಯಾಗುವ ವ್ಯಕ್ತಿ ಪೌರ ಕಾರ್ಮಿಕನಾಗಿಯೇ ನಿವೃತ್ತಿ ಹೊಂದಬೇಕಿತ್ತು. ಪ್ರಸ್ತುತ ಪೌರ ಕಾರ್ಮಿಕರ ಸೇವಾ ಜೇಷ್ಠತೆ, ವೃತ್ತಿಪರತೆ ಹಾಗೂ ಅರ್ಹತೆಯ ಆಧಾರದ ಮೇಲೆ ಸ್ಯಾನಿಟರಿ ಸೂಪರ್ವೈಸರ್, ಕರ ವಸಲಿಗಾರ ಸೇರಿದಂತೆ ಡಿ ಗ್ರೂಪ್ ಹುದ್ದೆಗಳಿಗೆ ಬಡ್ತಿ ನೀಡಲಾಗುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಈಚೆಗೆ ಉಡುಪಿ ನಗರದ ಸ್ವಚ್ಛತೆ, ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೌರ ಕಾರ್ಮಿಕರ ಶ್ರಮದಿಂದ ಉಡುಪಿ ಸ್ವಚ್ಛ ನಗರಿಯಾಗಿದ್ದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ ಎಂದು ಶ್ಲಾಘಿಸಿದರು.
ರಾಜ್ಯದಲ್ಲಿ ಮೊದಲ ಬಾರಿಗೆ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ವಿಮಾ ಯೋಜನೆ, ಅಪಘಾತ ವಿಮೆ, ಗೃಹಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ಕಸ ಸಂಗ್ರಹ ಜೊತೆಗೆ ಕಸ ವಿಲೇವಾರಿ ಘಟಕವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಸಾಲ್ಯಾನ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಬಾಲಕೃಷ್ಣ ಶೆಟ್ಟಿ, ಸದಸ್ಯ ಗಿರೀಶ್ ಅಂಚನ್, ಪರಿಸರ ಎಂಜಿನಿಯರ್ ಸ್ನೇಹಾ ಇದ್ದರು.
ಪೌರಾಯುಕ್ತ ಡಾ. ಉದಯ್ ಶೆಟ್ಟಿ ಸ್ವಾಗತಿಸಿದರು. ಆರೋಗ್ಯ ನಿರೀಕ್ಷಕ ಕರುಣಾಕರ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.