ಉಡುಪಿ: ನಗರವನ್ನು ಸ್ವಚ್ಛವಾಗಿಡುವ ಕೆಲಸವನ್ನು ಪೌರಕಾರ್ಮಿಕರು ನಿಷ್ಠೆಯಿಂದ ಮಾಡುತ್ತಿದ್ದಾರೆ. ಸ್ವಚ್ಛ ನಗರ ನಿರ್ಮಾಣದಲ್ಲಿ ಪೌರಕಾರ್ಮಿಕ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಬುಧವಾರ ಅಜ್ಜರಕಾಡು ಪುರಭವನದ ಮಿನಿ ಸಭಾಂಗಣದಲ್ಲಿ ನಗರಸಭೆಯಿಂದ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪೌರ ಕಾರ್ಮಿಕರಿಲ್ಲದ ನಗರ ಸ್ವಚ್ಛವಾಗಿರಿಸಲು ಸಾಧ್ಯವೇ ಇಲ್ಲ. ಉಡುಪಿ ಜಿಲ್ಲೆಯು ಸ್ವಚ್ಛ ಸರ್ವೇಕ್ಷಣ ಸ್ವಚ್ಛತಾ ರ್ಯಾಂಕಿಂಗ್ ಪಟ್ಟಿನಲ್ಲಿ ರಾಜ್ಯದಲ್ಲಿ 9ನೇ ಸ್ಥಾನದಲ್ಲಿದ್ದು, ಮುಂದಿನ ವರ್ಷ ಮೊದಲ ಮೂರು ರ್ಯಾಂಕ್ಗಳಲ್ಲಿ ಸ್ಥಾನ ಪಡೆಯುವ ಆಶಯವಿದೆ ಎಂದರು.
ಕೋವಿಡ್ ಸಂಧರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಪೌರ ಕಾರ್ಮಿಕರು ಧೈರ್ಯವಾಗಿ ಮುಂದೆ ಬಂದು ಕರ್ತವ್ಯ ನಿಭಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಶ್ಲಾಘಿಸಿದರು.
ಪೌರ ಕಾರ್ಮಿಕರು ನಗರದ ಸ್ವಚ್ಛತೆಯ ಜತೆಗೆ ವೈಯಕ್ತಿಕ ಸ್ವಚ್ಛತೆಯ ಕಡೆಗೂ ಆದ್ಯತೆ ನೀಡಬೇಕು. ಕೋವಿಡ್ ಸಂದರ್ಭ ಆರೋಗ್ಯದತ್ತ ಹೆಚ್ಚಿನ ಗಮನ ಹರಿಸಬೇಕು. ಸ್ವಚ್ಛತಾ ಕಾರ್ಯ ಮಾಡುವಾಗ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಸ್ವಚ್ಛತಾ ಕೆಲಸಕ್ಕೆ ತೆರಳುವಾಗ ಕೈಗವಸು ಹಾಗೂ ಇನ್ನಿತರ ರಕ್ಷಣಾ ಕವಚಗಳನ್ನು ಧರಿಸಬೇಕು ಎಂದರು.
ಎರಡು ದಿನಗಳ ಹಿಂದೆ ಉಡುಪಿಯಲ್ಲಿ ಸುರಿದ ಭಾರಿ ಮಳೆಯಿಂದ ಮನೆಗಳು ಜಲಾವೃತಗೊಂಡಿದ್ದವು. ಈ ಸಂಧರ್ಭ ಜನಪ್ರತಿನಿಧಿಗಳು, ಜಿಲ್ಲಾಡಳಿತ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸ್ವಯಂ ಸೇವಕ ಸಂಘಗಳು ಸೇವಾ ಮನೋಭಾವದಿಂದ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಲಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು. ಉತ್ತಮ ಸೇವೆ ಸಲ್ಲಿಸಿದ ಪೌರಕಾರ್ಮಿಕರನ್ನು ಹಾಗೂ ನೈರ್ಮಲ್ಯ ಮೇಲ್ವಿಚಾರಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮೋಹನ್ ರಾಜ್, ಆರೋಗ್ಯ ನಿರೀಕ್ಷಕ ಕರುಣಾಕರ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.