ADVERTISEMENT

ಬೇನಾಮಿ ಆಸ್ತಿ: ಲೋಕಾಯುಕ್ತಕ್ಕೆ ದೂರು ನೀಡಿದ ಮುತಾಲಿಕ್‌

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 13:23 IST
Last Updated 2 ಮಾರ್ಚ್ 2023, 13:23 IST
ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್   

ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಕೆರೆಬೆಟ್ಟು ಗ್ರಾಮದಲ್ಲಿ 67 ಎಕರೆ 94 ಸೆಂಟ್ಸ್‌ ಭೂಮಿಯನ್ನು ಬೇನಾಮಿ ಹೆಸರಿನಲ್ಲಿ ಖರೀದಿ ಮಾಡಲಾಗಿದ್ದು ತನಿಖೆ ನಡೆಸಬೇಕು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುರುವಾರ ಲೋಕಾಯುಕ್ತ ಕಚೇರಿಗೆ ದಾಖಲೆಗಳ ಸಹಿತ ದೂರು ಸಲ್ಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮುತಾಲಿಕ್‌, ಬೇನಾಮಿ ಆಸ್ತಿ ಖರೀದಿಯ ಹಿಂದೆ ಜಿಲ್ಲೆಯ ಪ್ರಭಾವಿ ಸಚಿವರು ಹಾಗೂ ಸಂಬಂಧಿಗಳ ಕೈವಾಡವಿದ್ದು ಪ್ರಕರಣದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಮುಖ್ಯಮಂತ್ರಿಗಳ ಆಪ್ತರೂ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇರುವುದರಿಂದ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

53 ರೈತರಿಂದ ಒತ್ತಾಯಪೂರ್ವಕವಾಗಿ ಕಡಿಮೆ ಬೆಲೆಗೆ ಭೂಮಿಯನ್ನು ಖರೀದಿ ಮಾಡಿ ಬಳಿಕ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ನಾಲ್ಕೈದು ಪಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗಿದೆ. ಸರ್ಕಾರವೇ ನೇರವಾಗಿ ರೈತರಿಂದ ಭೂಮಿ ಖರೀದಿ ಮಾಡಬಹುದಿತ್ತು ಎಂದು ಮುತಾಲಿಕ್ ವಾಗ್ದಾಳಿ ನಡೆಸಿದರು.

ADVERTISEMENT

ಯಾವುದೇ ಉದ್ಯೋಗ, ಆದಾಯ ಇಲ್ಲದ ಬಿಜೆಪಿ ಪದಾಧಿಕಾರಿಗಳಾಗಿರುವ ದಂಪತಿ ಕೋಟ್ಯಂತರ ರೂಪಾಯಿ ಮೌಲ್ಯದ 67 ಎಕರೆ ಭೂಮಿಯನ್ನು ಖರೀದಿ ಮಾಡಲು ಸಾಧ್ಯವಾಗಿದ್ದು ಹೇಗೆ, ಹಣದ ಮೂಲ ಯಾವುದು ಎಂಬುದನ್ನು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.