ADVERTISEMENT

ಯುವಸಮುದಾಯ ವ್ಯಸನಗಳಿಂದ ಮುಕ್ತವಾಗಲಿ: ಶಾಸಕ ಕೆ.ರಘುಪತಿ ಭಟ್

ನಶಾ ಮುಕ್ತ ಭಾರತ ಅಭಿಯಾನದಲ್ಲಿ ಶಾಸಕ ರಘುಪತಿ ಭಟ್‌

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 14:04 IST
Last Updated 4 ಆಗಸ್ಟ್ 2021, 14:04 IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ನಶಾ ಮುಕ್ತ ಭಾರತ ಅಭಿಯಾನದಲ್ಲಿ ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ನಶಾ ಮುಕ್ತ ಭಾರತ ಅಭಿಯಾನದಲ್ಲಿ ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು.   

ಉಡುಪಿ: ಜಿಲ್ಲೆಯಲ್ಲಿ 27 ಸಾವಿರಕ್ಕೂ ಹೆಚ್ಚು ಹೊರ ರಾಜ್ಯ ಹಾಗೂ ವಿದೇಶಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ದುಶ್ಚಟಗಳನ್ನು ಅಂಟಿಸಿಕೊಂಡಿರುವವರ ಸಂಖ್ಯೆ ಹೆಚ್ಚಾಗಿದ್ದು, ವಿದ್ಯಾರ್ಥಿ ಸಮೂಹ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕಿದೆ ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಲವು ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ನಡೆದ ನಶಾ ಮುಕ್ತ ಭಾರತ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ವ್ಯಸನದಿಂದ ದೂರವಿದ್ದರೆ ಮಾತ್ರ ಉತ್ತಮ ಆರೋಗ್ಯದ ಜತೆಗೆ ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು ಎಂದರು.

ಯುವಕರೇ ಹೆಚ್ಚು ದುಶ್ಟಟಕ್ಕೆ ಬಲಿಯಾಗುತ್ತಿದ್ದು, ದುಶ್ಟಟಗಳಿಂದ ಉಂಟಾಗುವ ಕೆಟ್ಟ ಪರಿಣಾಮಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸಬೇಕಿದೆ. ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಈಗ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ, ಜಿಲ್ಲೆಯಲ್ಲಿ ಡ್ರಗ್ಸ್‌ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದರು ಎಂದರು.

ADVERTISEMENT

ದುಶ್ಚಟಗಳು ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ. ಇದರಿಂದ ಕೋವಿಡ್‌ ಸೋಂಕು ಸುಲಭವಾಗಿ ತಗುಲುವ ಅಪಾಯವಿರುತ್ತದೆ. ದುಶ್ಚಟಗಳನ್ನು ತ್ಯಜಿಸುವುದು ಉತ್ತಮ ಎಂದು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಅವಶ್ಯಕ. ಡ್ರಗ್ಸ್ ಬಳಕೆ, ಮಾರಾಟ, ಸಾಗಾಟಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬಹುದು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್‌.ಶರ್ಮಿಳಾ ಮಾತನಾಡಿ, ವಿದ್ಯಾರ್ಥಿಗಳೇ ಹೆಚ್ಚು ವ್ಯಸನಗಳಾಗುತ್ತಿದ್ದು, ಸೋಲಿನ ನೋವು ಸಹಿಸದೆ ದುಶ್ಚಟಕ್ಕೆ ಮಾರುಹೋಗುವ ಸಾದ್ಯತೆ ಹೆಚ್ಚಿರುತ್ತದೆ. ಇಂತಹ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು, ಸ್ನೇಹಿತರ ಮಾರ್ಗದರ್ಶನ ಅಗತ್ಯ ಎಂದರು.

ಹೆಚ್ಚುವರಿ ಎಸ್‌ಪಿ ಕುಮಾರ್ ಚಂದ್ರ ಮಾತನಾಡಿ, ಜಿಲ್ಲೆಯಲ್ಲಿ ಈಚೆಗೆ ₹ 3 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಪೈಕಿ ವಿದ್ಯಾರ್ಥಿಗಳಿಂದ ಜಪ್ತಿ ಮಾಡಿರುವುದು ಹೆಚ್ಚಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್, ಜಿಲ್ಲಾ ಅಂಗವಿಕಲ ಸಬಲೀಕರಣ ಅಧಿಕಾರಿ ರತ್ನ ಮಾತನಾಡಿದರು. ಬಾಳಿಗ ಆಸ್ಪತ್ರೆಯ ಮನಶಾಸ್ತ್ರಜ್ಞ ಡಾ.ಪಿ.ವಿ. ಭಂಡಾರಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಡಿಎಚ್‌ಒ ಡಾ. ನಾಗಭೂಷಣ್ ಉಡುಪ ಇದ್ದರು. ಡಿಎನ್‌ಎ ಸಂಸ್ಥೆಯ ವ್ಯವಸ್ಥಾಪಕಿ ರೂಪಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ನಾಗರಿಕರ ಸಹಾಯವಾಣಿಯ ಸಂಯೋಜಕ ಗಣೇಶ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.