
ಉಡುಪಿ: ಆರೋಗ್ಯ ಮತ್ತು ಶಿಕ್ಷಣ ಒಂದಕ್ಕೊಂದು ಪೂರಕವಾಗಿದ್ದು, ಉತ್ತಮ ಆರೋಗ್ಯ ಹೊಂದಿದ್ದಾಗ ಕಲಿಕೆಯಲ್ಲಿ ಆಸಕ್ತಿ ಹೆಚ್ಚುತ್ತದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಆಶ್ರಯದಲ್ಲಿ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಹಾಗೂ ಶಿಕ್ಷಣ ಇಲಾಖೆಯ ಸಮನ್ವಯದಿಂದ ರಾಷ್ಟ್ರೀಯ ಜಂತು ಹುಳು ನಿವಾರಣೆ ಕಾರ್ಯಕ್ರಮ ರಾಜ್ಯದಾದ್ಯಂತ ನಡೆಯುತ್ತಿದೆ. ಮಕ್ಕಳಲ್ಲಿ ಜಂತು ಹುಳುವಿನ ಬಾಧೆ ಗಣನೀಯವಾಗಿ ಕಡಿಮೆಯಾಗಿದ್ದು, ಜಂತು ಹುಳು ನಿವಾರಣೆಯಲ್ಲಿ ಶೇ 90ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ಅಂಗನವಾಡಿ ಮಕ್ಕಳಿಂದ ಹಿಡಿದು ಪ್ರೌಢಶಾಲಾ ವಿಭಾಗದ ಮಕ್ಕಳವರೆಗೆ ಎಲ್ಲರಿಗೂ ಅಲ್ಬೆಂಡ್ಜೋಲ್ ಮಾತ್ರೆಗಳನ್ನು ವರ್ಷಕ್ಕೆ ಎರಡು ಬಾರಿ ನೀಡಲಾಗುತ್ತಿದೆ. ಅಭಿಯಾನದ ದಿನದಂದು ತಪ್ಪಿ ಹೋದ ಮಕ್ಕಳಿಗೆ ಮನೆಗಳಿಗೆ ಭೇಟಿ ನೀಡುವ ಮೂಲಕ ಮಾತ್ರೆಗಳನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಭಯವಿಲ್ಲದೆ ಅಲ್ಬೆಂಡ್ಜೋಲ್ ಮಾತ್ರೆಗಳನ್ನು ಸೇವಿಸಬಹುದು. ಅದರಿಂದ ಆರೋಗ್ಯಕ್ಕೆ ಹಾನಿಯಾಗುವುದಿಲ್ಲ. ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮನೆಯಲ್ಲಿ ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು. ಆಹಾರ ಸೇವಿಸುವ ಮುನ್ನ ಕೈಗಳನ್ನು ತೊಳೆದುಕೊಳ್ಳುವ ಜೊತೆಗೆ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡು ಆರೋಗ್ಯವಂತರಾಗಬೇಕು ಎಂದು ಸಲಹೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಸಿ. ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಆರೋಗ್ಯದ ಕಡೆಗೂ ಗಮನಹರಿಸಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜೋತ್ಸ್ನಾ ಬಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಪ್ರಾಂಶುಪಾಲ ಜಗದೀಶ್ ಕುಮಾರ್, ಮುಖ್ಯಶಿಕ್ಷಕಿ ಇಂದಿರಾ ಭಾಗವಹಿಸಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿದರು. ಶಶಿಧರ್ ಎಚ್. ನಿರೂಪಿಸಿದರು. ಡಿಪಿಸಿ ಸುಧೀಂದ್ರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.