ADVERTISEMENT

ವಿಪತ್ತು ನಿರ್ವಹಣೆಗೆ ಎನ್‍ಡಿಆರ್‌ಎಫ್‌ ತಂಡ

ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಸುರತ್ಕಲ್‌ನಲ್ಲಿ ಮೊಕ್ಕಾಂ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2019, 15:25 IST
Last Updated 22 ಏಪ್ರಿಲ್ 2019, 15:25 IST
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳ ವಿಪತ್ತು ನಿರ್ವಹಣೆ ಕಾರ್ಯಕ್ರಮಗಳ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿರ್ವಹಣೆ ಕುರಿತ ಸಭೆ ನಡೆಯಿತು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳ ವಿಪತ್ತು ನಿರ್ವಹಣೆ ಕಾರ್ಯಕ್ರಮಗಳ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿರ್ವಹಣೆ ಕುರಿತ ಸಭೆ ನಡೆಯಿತು.   

ಉಡುಪಿ: ಮುಂಬರುವ ಮಳೆಗಾಲದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಪ್ರಕೃತಿ ವಿಕೋಪವನ್ನು ಸಮರ್ಪಕವಾಗಿ ನಿರ್ವಹಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ತಂಡದ ಒಂದು ಬೆಟಾಲಿಯನ್ ಮೇ ತಿಂಗಳ ಅಂತ್ಯಕ್ಕೆ ಬರಲಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ರಾಜ್‍ಕುಮಾರ್ ಖತ್ರಿ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳ ವಿಪತ್ತು ನಿರ್ವಹಣೆ ಕಾರ್ಯಕ್ರಮಗಳ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿರ್ವಹಣೆ ಕುರಿತ ಸಭೆಯಲ್ಲಿ ಮಾತನಾಡಿದರು.

ಎನ್‍ಡಿಆರ್‌ಎಫ್‌ ದಕ್ಷಿಣ ವಲಯದ ಕಚೇರಿ ಆಂಧ್ರಪ್ರದೇಶದ ಗುಂಟೂರಿನಲ್ಲಿರುವುದರಿಂದ ತುರ್ತು ಸಂದರ್ಭಗಳಲ್ಲಿ ಅತಿವೃಷ್ಟಿ ಪ್ರದೇಶಗಳಿಗೆ ತಲುಪಿಸಲು ವಿಳಂಬವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಎನ್‍ಡಿಆರ್‌ಎಫ್‍ ತಂಡವನ್ನು ನಿಯೋಜಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಎನ್‍ಡಿಆರ್‌ಎಫ್ ತಂಡವು ಸುರತ್ಕಲ್‍ನಲ್ಲಿ ಇರಲಿದೆ ಎಂದು ತಿಳಿಸಿದರು.

ADVERTISEMENT

ರಾಷ್ಟ್ರೀಯ ವಿಪತ್ತು ನಿರ್ವಹಣಾ ಯೋಜನಾ ನಿರ್ದೇಶಕ ರಾಜ್‍ಕುಮಾರ್ ಪೂಜಾರಿ ಮಾತನಾಡಿ, ‘ವಿಪತ್ತು ಸಂದರ್ಭ ಬಳಸಿಕೊಳ್ಳಲು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಒಂಬತ್ತುಕೆರೆ ಎಂಬಲ್ಲಿ ₹ 2.7 ಕೋಟಿ ವೆಚ್ಚದಲ್ಲಿ ವಿವಿದೋದ್ದೇಶ ವಿಪತ್ತು ತಂಗುದಾಣ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.ಇದು ಶಾಲಾ ಕಟ್ಟಡವಾಗಿದೆ‌.

ಇದರೊಂದಿಗೆ, ಸುರತ್ಕಲ್‌ನ ಹೊಸಬೆಟ್ಟು ಸಮೀಪ ₹ 3.8 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣವಾಗುತ್ತಿದೆ.ಈ ಎರಡೂ ಕಟ್ಟಡಗಳನ್ನು ವಿಪತ್ತು ಸಂದರ್ಭಗಳಲ್ಲಿ ಹಾಗೂ ಇತರ ಸಮಯಗಳಲ್ಲಿ ಬಳಕೆಯಾಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಜಿಲ್ಲೆಯಲ್ಲಿ ಏಳು ತಾಲ್ಲೂಕುಗಳಿಗೆ ಒಂದೇ ಉಪವಿಭಾಗ ಇದ್ದು, ಆಡಳಿತಾತ್ಮಕವಾಗಿ ಎರಡು ಉಪ ವಿಭಾಗಗಳ ರಚನೆಯ ಅಗತ್ಯವಿದೆ. ಅದೇರೀತಿ ನೂತನ ಹೋಬಳಿಗಳನ್ನು ರಚಿಸಬೇಕಾಗಿದೆ ಎಂದು ಪ್ರಧಾನ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಜತೆಗೆ, ಜಿಲ್ಲೆಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ 4 ತಾಲ್ಲೂಕುಗಳಿಗೆ ಆಡಳಿತಾತ್ಮಕ ಹಾಗೂ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದರು.

ಇದಕ್ಕೆ ಸ್ಪಂದಿಸಿದ ಡಾ.ರಾಜ್ ಕುಮಾರ್ ಖತ್ರಿ, ನೂತನ ತಾಲ್ಲೂಕುಗಳಿಗೆ ಮೂಲಸೌಕರ್ಯ ಒದಗಿಸಲು ಮಂಜೂರಾತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.