ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ರಾಷ್ಟ್ರಮಟ್ಟದಲ್ಲಿ ದೊಡ್ಡ ಸಾಧನೆ ಮಾಡಿದ್ದು, ಮತ್ತೊಮ್ಮೆ ರಾಜ್ಯದಿಂದಲೇ ಸ್ಪರ್ಧಿಸಲಿ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಶಿಸಿದರು.
ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ದೇಶದ ಆರ್ಥಿಕ ಮತ್ತು ರಕ್ಷಣಾ ಸಚಿವೆಯಾಗಿದ್ದು ಸಣ್ಣ ವಿಚಾರವಲ್ಲ. ಕೊರೊನಾ ಸವಾಲಿನ ಮಧ್ಯೆಯೂ ದೇಶದ ಅರ್ಥ ವ್ವವಸ್ಥೆಯನ್ನು ನಿರ್ವಹಣೆ ಮಾಡಿದ್ದಾರೆ ಎಂದರು.
ರಾಜ್ಯಸಭೆಗೆ ರಾಜ್ಯದಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬೇಕಾದರೂ ಸ್ಪರ್ಧಿಸಲಿ. ಹಿಂದೆ ಇಂದಿರಾಗಾಂಧಿ, ಸೋನಿಯಾಗಾಂಧಿ ಕೂಡ ರಾಜ್ಯದಿಂದ ಸ್ಪರ್ಧಿಸಿದ್ದರು. ಈಗ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೂ ಸ್ವಾಗತ ಎಂದರು.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೇಲೆತ್ತಲು ಹೋಗಿದ್ದ ಪ್ರಿಯಾಂಕಾಗೆ ತೀವ್ರ ನಿರಾಶೆಯಾಗಿತ್ತು. ಈಗ ಕರ್ನಾಟಕಕ್ಕೆ ಬರುತ್ತಿರಬಹುದು. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು ಪ್ರಿಯಾಂಕಾ ಹಿಂಬಾಗಿಲಿನಿಂದ ಸಂಸತ್ ಪ್ರವೇಶೀಸುವ ಬದಲು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಆರಿಸಿ ಬಂದರೆ ಉತ್ತಮ ಎಂದು ಶೋಭಾ ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.