ADVERTISEMENT

ಮಕ್ಕಳನ್ನು ಕಾಡುವ ನ್ಯುಮೋನಿಯಾ

ನ.12ರಿಂದ ಫೆ.28 ರವರೆಗೆ ಜಿಲ್ಲೆಯಾದ್ಯಂತ ಜಾಗೃತಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2022, 13:27 IST
Last Updated 12 ನವೆಂಬರ್ 2022, 13:27 IST
ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ನಡೆದ ನ್ಯುಮೋನಿಯಾ ಜಾಗೃತಿ ಮತ್ತು ಕ್ರಿಯಾ ಅಭಿಯಾನ ಉದ್ಘಾಟಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿದರು.
ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ನಡೆದ ನ್ಯುಮೋನಿಯಾ ಜಾಗೃತಿ ಮತ್ತು ಕ್ರಿಯಾ ಅಭಿಯಾನ ಉದ್ಘಾಟಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಾತನಾಡಿದರು.   

ಉಡುಪಿ: ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವನ್ನಪ್ಪದಂತೆ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ನ್ಯುಮೋನಿಯಾ ಸಾವು ಶೂನ್ಯಕ್ಕಿಳಿಯಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ನಡೆದ ನ್ಯುಮೋನಿಯಾ ಕೊನೆಗಾಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯಾ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ಕಾಣಿಸಿಕೊಳ್ಳುವ ನ್ಯುಮೋನಿಯಾವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಪೋಷಕರಿಗೆ ನ್ಯುಮೋನಿಯಾ ರೋಗದ ಲಕ್ಷಣಗಳ ಕುರಿತು ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ನ್ಯುಮೋನಿಯಾದಿಂದ ಮಕ್ಕಳು ಮೃತಪಡದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ADVERTISEMENT

ಮಕ್ಕಳ ಶ್ವಾಸಕೋಶದಲ್ಲಿ ರೋಗಾಣುಗಳು ಉಲ್ಬಣಗೊಂಡು ನ್ಯುಮೋನಿಯಾ ಉಂಟಾಗುತ್ತದೆ. ಪರಿಣಾಮ 5 ವರ್ಷದೊಳಗಿನ ಮಕ್ಕಳು ಮರಣ ಹೊಂದುವ ಅಪಾಯ ಹೆಚ್ಚಾಗಿರುತ್ತದೆ.

ನ್ಯುಮೋನಿಯಾ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ ಪ್ರಾರಂಭಿಕ ಹಂತದಲ್ಲಿಯೇ ನ್ಯುಮೋನಿಯವನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಅಂಗನವಾಡಿಗಳಿಗೆ ಬರುವ ಮಕ್ಕಳ ತಪಾಸಣೆ ಮಾಡಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿನೀಡುವ ಸಂದರ್ಭ ಕೆಮ್ಮು ಉಸಿರಾಟ ಸಮಸ್ಯೆಯಿರುವ ಮಕ್ಕಳು ಕಂಡುಬಂದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ಮಾಹಿತಿ ನೀಡಿ ಚಿಕಿತ್ಸೆ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನ.12ರಿಂದ ಫೆ.28 ರವರೆಗೆ ನಡೆಯುವ ಅಭಿಯಾನದಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಸ್ವಯಂ ಸೇವಾ ಸಂಘಟನೆಗಳ ಸಹಕಾರದೊಂದಿಗ ಮನೆಗಳಲ್ಲಿ ಹೊಗೆ ರಹಿತ ಅಡುಗೆ ಮಾಡುವ ಬಗ್ಗೆ, ಆಗಾಗಾ ಕೈಗಳನ್ನು ಶುಚಿಗೊಳಿಸುವ ಬಗ್ಗೆ, ಕೈ ತೊಳೆಯುವ ವಿಧಾನದ ಬಗ್ಗೆ, ವೈಯಕ್ತಿಕ ಸ್ವಚ್ಚತೆ ಹಾಗೂ ಶುದ್ಧ ಕುಡಿಯುವ ನೀರಿನ ಬಳಕೆಯ ಕುರಿತು ಅರಿವು ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜಗೋಪಾಲ ಭಂಡಾರಿ , ಉಡುಪಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ರಾಮರಾವ್ ಸ್ವಾಗತಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ವಂದಿಸಿದರು. ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಂ.ಜಿ.ರಾಮ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.