ಉಡುಪಿ: ನೇಕಾರಿಕೆ ವೃತ್ತಿಗೆ ಪುನರುಜ್ಜೀವನ ನೀಡಲು ಹಾಗೂ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಲು 100 ನೇಕಾರರನ್ನು ಮರಳಿ ವೃತ್ತಿಗೆ ಕರೆ ತರಲಾಗುವುದು ಎಂದು ಉಡುಪಿಯ ಪದ್ಮಶಾಲಿ ನೇಕಾರರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ ಇಂದ್ರಾಳಿ ಹೇಳಿದರು.
ಕಲ್ಯಾಣಪುರದ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನೇಕಾರ ಸಮುದಾಯದ ಸಾಧಕರನ್ನು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಿಂದ ಸಂವಾದ ಕಾರ್ಯಕ್ರಮ ನಡೆಯಿತು.
ಕೈಮಗ್ಗದಿಂದ ತಯಾರಿಸಿದ ವಸ್ತ್ರಗಳ ಫ್ಯಾಷನ್ ಶೋ ನಡೆಯಿತು. ಮಹಿಳೆಯರು ಹಾಗೂ ಯುವತಿಯರು ಕೈಮಗ್ಗದ ಉಡುಪಿ ಸೀರೆಗಳನ್ನುಟ್ಟು ರ್ಯಾಂಪ್ ಮೇಲೆ ಹೆಜ್ಜೆ ಹಾಕಿದರು. ಪುರುಷರು ಕೂಡ ಕೈಮಗ್ಗದ ವಸ್ತ್ರ ಧರಿಸಿ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ನೇಕಾರ ಬಿಂಬ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಆಡಳಿತ ಮೊಕ್ತೇಸರ ಜ್ಯೋತಿಪ್ರಸಾದ್ ಶೆಟ್ಟಿಗಾರ್, ಮಹಿಳಾ ವೇದಿಕೆ ಅಧ್ಯಕ್ಷೆ ಶೋಭಾ ಶೆಟ್ಟಿಗಾರ್, ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ನಗರಸಭೆ ಸದಸ್ಯೆ ಜಯಂತಿ ಪೂಜಾರಿ, ಕಲ್ಯಾಣಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣ ದೇವಾಡಿಗ, ದಕ್ಷಿಣ ಕನ್ನಡ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಎಂ.ಜಯರಾಮ್ ಇದ್ದರು.
ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದತ್ತರಾಜ್ ಸಿದ್ಧಕಟ್ಟೆ ಸ್ವಾಗತಿಸಿದರು. ಭವಾನಿ ಶಂಕರ್ ಹಾಗೂ ಅನುರಾಧಾ ಕಾರ್ಯಕ್ರಮ ನಿರೂಪಿಸಿದರು. ನರೇಂದ್ರ ಶೆಟ್ಟಿ ಹೆರ್ಗ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.