ADVERTISEMENT

ರಾಮಮಂದಿರ: ಭೂಮಿಯ ಧಾರಣ ಸಾಮರ್ಥ್ಯ ಪರೀಕ್ಷೆ

ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಭೆಯಲ್ಲಿ ಭಾಗವಹಿಸಿದ ಪೇಜಾವರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 16:22 IST
Last Updated 1 ನವೆಂಬರ್ 2020, 16:22 IST
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣ ಕಾಮಗಾರಿಯನ್ನು ಭಾನುವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವೀಕ್ಷಿಸಿದರು. ‌
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣ ಕಾಮಗಾರಿಯನ್ನು ಭಾನುವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವೀಕ್ಷಿಸಿದರು. ‌   

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಭೂಮಿಯ ಧಾರಣ ಸಾಮರ್ಥ್ಯ ಪರೀಕ್ಷೆ ನಡೆಸಲಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಅಯೋಧ್ಯೆ ಪ್ರವಾಸದಲ್ಲಿರುವ ಶ್ರೀಗಳು ಭಾನುವಾರ ರಾಮಮಂದಿರ ನಿರ್ಮಾಣ ಕಾಮಗಾರಿ ವೀಕ್ಷಿಸಿ, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದರು. ‌

‘ರಾಮಮಂದಿರ ನಿರ್ಮಾಣಕ್ಕೆ ಭೂಮಿಯ ಸಮತಟ್ಟು ಕಾರ್ಯ ನಡೆಯುತ್ತಿದ್ದು, ಹಳೆಯ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಮಂದಿರ ನಿರ್ಮಾಣಕ್ಕೆ ಸಿದ್ಧವಾಗಿದ್ದ ಶಿಲಾಸ್ಥಂಭಗಳನ್ನು ಕಾಮಗಾರಿಯ ಜಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ. ಎಲ್‌ ಅಂಡ್‌ ಟಿ ಕಂಪೆನಿಯು ಟಾಟಾ ಸಂಸ್ಥೆಯ ಸಹಯೋಗದಲ್ಲಿ ಮಂದಿರ ಕಾಮಗಾರಿ ನಡೆಸಲಿದೆ ಎಂದು ಶ್ರೀಗಳು ತಿಳಿಸಿದರು.

ADVERTISEMENT

ವೈದಿಕ ವಾಸ್ತುಶಿಲ್ಪದ ಹಿನ್ನೆಲೆಯಲ್ಲಿ ಮಂದಿರ ನಿರ್ಮಿಸಲು ವೈದಿಕ ವಾಸ್ತುಶಾಸ್ತ್ರ ತಜ್ಞರ ಸಮಿತಿ ರಚಿಸಿ, ಸಲಹೆಗಳನ್ನು ಪಡೆಯಲಾಗುವುದು. ರಾಮಮಂದಿರ ನಿರ್ಮಾಣಕ್ಕೆ ಧನ ಸಂಗ್ರಹಿಸಲು ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ ಮಾತ್ರ ಖಾತೆ ತೆರೆಯಲು ಸಭೆ ತೀರ್ಮಾನಿಸಿದೆ ಎಂದರು.

ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ಧನ ಸಂಗ್ರಹಿಸಲು ಜ.15ರಿಂದ ಮಾರ್ಚ್‌ ಮೊದಲವಾರದವರೆಗೂ (45 ದಿನ) ವಿಶೇಷ ಅಭಿಯಾನ ನಡೆಸಲಾಗುವುದು. ದೇಶದ ಮೂಲೆ ಮೂಲೆಗೂ ತೆರಳುವ ಕಾರ್ಯಕರ್ತರು ದೇಣಿಗೆ ಸಂಗ್ರಹಿಸಲಿದ್ದಾರೆ. ರಾಮಭಕ್ತರು ಸಹಕಾರ ನೀಡಬೇಕು ಎಂದು ಶ್ರೀಗಳು ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.