ಉಡುಪಿ: ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭವಾಗದಂತೆ ರಾಜಕೀಯ ಷಡ್ಯಂತ್ರ ನಡೆಸಲಾಗುತ್ತಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಷಡ್ಯಂತ್ರದ ಹಿಂದಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ಆರೋಪಿಸಿದರು.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭವಾಗದಂತೆ ಪ್ರಮೋದ್ ಮಧ್ವರಾಜ್ ಅವರು ಸಿದ್ದರಾಮಯ್ಯ ಅವರ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಮರಳುಗಾರಿಕೆ ವಿಚಾರವಾಗಿ ರಾಜ್ಯದ ಯಾವುದೇ ಅಧಿಕಾರಿಗಳನ್ನು ಭೇಟಿಮಾಡಿದರೂ ರಾಜಕೀಯ ಒತ್ತಡವಿರುವುದಾಗಿ ಸ್ಪಷ್ಟವಾಗಿ ಹೇಳುತ್ತಾರೆ. ಉದಯ ಸುವರ್ಣ ಎಂಬುವರು ಮಧ್ವರಾಜ್ ಅವರ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಾರೆ. ಅವರು ಎನ್ಜಿಟಿ ಕೋರ್ಟ್ ಮೆಟ್ಟಿಲೇರಿರುವದರ ಹಿಂದೆಯೂ ರಾಜಕೀಯ ಅಡಗಿದೆ. ಕೂಡಲೇ ಷಡ್ಯಂತ್ರ ನಿಲ್ಲಿಸಬೇಕು ಎಂದು ಶಾಸಕರು ಹೇಳಿದರು.
ಕರಾವಳಿ ಭಾಗದ ಮೀನಿನ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಸಕರು ಗೋವಾ ಸ್ಪೀಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೆವು. ಮೀನುಗಾರಿಕಾ ಸಚಿವ ಹಾಗೂ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ್ದೆವು. ಅದರ ಫಲಶ್ರುತಿಯಾಗಿ ನಿಷೇಧ ತೆರವಾಗಿದೆ. ಗೋವಾ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಶಾಸಕರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.