ಉಡುಪಿ: ಜಿಲ್ಲಾ ವ್ಯಾಪ್ತಿಯ ಮುಜರಾಯಿ ಇಲಾಖಾ ಅರ್ಚಕರ ಸಂಘದಿಂದ ಜ.16ರಂದು ಬೆಳಿಗ್ಗೆ 10ಕ್ಕೆ ಕೃಷ್ಣ ಮಠದ ರಾಜಾಂಗಣದಲ್ಲಿ ಅರ್ಚಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ಸದಸ್ಯ ರಾಮ ಭಟ್ ಸಾಣೂರು ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಧಾರ್ಮಿಕ ಪರಿಷತ್ ಆಶ್ರಯದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಅದಮಾರು ಮಠದ ವಿಶ್ವಪ್ರಿಯತೀರ್ಥ ಸ್ವಾಮೀಜಿ ಹಾಗೂ ಈಶಪ್ರಿಯ ತೀರ್ಥ ಸ್ವಾಮೀಜಿ ಸಮಾವೇಶ ಉದ್ಘಾಟಿಸಲಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ ಶಾಸಕ ಕೆ.ರಘುಪತಿ ಭಟ್, ವಿ.ಸುನೀಲ್ ಕುಮಾರ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ದತ್ತಿ ಇಲಾಖೆ ಸಹಾಯಕ ಆಯುಕ್ತ ಆರ್. ಶೇಷಪ್ಪ, ಎಂಐಟಿ ಪ್ರಾಧ್ಯಾಪಕ ಡಾ.ನಾರಾಯಣ ಶೆಣೈ, ಅರ್ಚಕರ ಸಂಘದ ಅಧ್ಯಕ್ಷ ರಾಮದಾಸ ಆಚಾರ್ಯ ಭಾಗವಹಿಸಲಿದ್ದಾರೆ ಎಂದರು.
ಹೆರ್ಗ ಹರಿಪ್ರಸಾದ್ ಭಟ್ ಮಾತನಾಡಿ, ಸಮಾವೇಶದಲ್ಲಿ ‘ದೇವಸ್ಥಾನದ ದೈನಂದಿನ ಆಚರಣೆ ಹಾಗೂ ಅರ್ಚಕರ ಕರ್ತವ್ಯಗಳು’ ಹಾಗೂ ‘ದೇವಸ್ಥಾನದ ಪ್ರಾಯಶ್ಚಿತ್ತಗಳು’ ವಿಷಯದ ಕುರಿತು ಉಪನ್ಯಾಸ ಏರ್ಪಡಿಸಲಾಗಿದೆ. ದೇವರ ಸೇವೆ ಮಾಡುವ ಅರ್ಚಕರಿಗೆ ವೇತನ ಸೇರಿದಂತೆ ಯಾವುದೇ ಸೌಲಭ್ಯಗಳಿಲ್ಲ. ಅರ್ಚಕ ವೃತ್ತಿಯಲ್ಲಿರುವವರ ಸಮಸ್ಯೆಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಅಧೀನದಲ್ಲಿ ಎ ವರ್ಗದ 25, ಬಿ ವರ್ಗದ 18 ಹಾಗೂ ಸಿ ವರ್ಗದ 766 ದೇವಾಲಯಗಳಿದ್ದು, ಎಲ್ಲ ಅರ್ಚಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಧಾರ್ಮಿಕ ಪರಿಷತ್ ಸದಸ್ಯರಾದ ರಮಾಕಾಂತ ದೇವಾಡಿಗ, ಕೆ.ಆರ್.ಸುನೀಲ್, ವಾಸುದೇವ ಹಂಗಾರಕಟ್ಟೆ ಸುದ್ದಿಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.