ಎನ್ ಎಸ್ ಬೋಸರಾಜು, ಸಣ್ಣ ನೀರಾವರಿ ಸಚಿವ
ಕಾಪು (ಪಡುಬಿದ್ರಿ): ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5 ಕೆರೆಗಳನ್ನು ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಇದ್ದು, ಅನುದಾನ ಲಭ್ಯತೆೆಗೆ ಅನುಗುಣವಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸ ರಾಜು ತಿಳಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಸಣ್ಣ ನೀರಾವರಿ ಇಲಾಖಾ ವ್ಯಾಪ್ತಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ 1 ಕೆರೆ ಇದ್ದು, ಸುಸ್ಥಿಯಲ್ಲಿದೆ. ಹಾಗೂ ಜನಪ್ರತಿನಿಧಿಗಳ ಶಿಫಾರಸಿನ ಮೇರೆಗೆ 4,702 ಕೆರೆಗಳನ್ನು ಆಧುನೀಕರಣ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಿ ಅಂತರ್ಜಲ ವೃದ್ಧಿಯೊಂದಿಗೆ ಸುತ್ತಮುತ್ತಲಿನ ರೈತರ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾತ್ ಕಾಲನಿಗಳ ಅಭಿವೃದ್ಧಿ, ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ರಸ್ತೆ, ಚರಂಡಿ, ಬೀದಿದೀಪಗಳ ವ್ಯವಸ್ಥೆ ಅನುದಾನ ಬಿಡುಗಡೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ ಮಹದೇವಪ್ಪ, ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸುವ ಬಗ್ಗೆ ತಿಳಿಸಿದರು.
ಯೋಜನೆಯ ಬಗ್ಗೆ ಪ್ರಸಕ್ತ ಸಾಲಿನಲ್ಲಿ 108.92 ಕೋಟಿ ಮಂಜೂರಾತಿ ನೀಡಿರುವ ಕಾಮಗಾರಿಗಳಿಗೆ ವೆಚ್ಚ ಮಾಡಲಾಗುವುದು ಎಂದರು.
ಬಾಡಿಗೆ, ಇತರ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಕೇಳಿದ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಉತ್ತರಿಸಿ, ಉಡುಪಿ ಜಿಲ್ಲೆಯಲ್ಲಿ 1,222 ಅಂಗನವಾಡಿ ಕೇಂದ್ರಗಳಿದ್ದು, ಸ್ವಂತ ಕಟ್ಟಡದಲ್ಲಿ 1,052, ಬಾಡಿಗೆ ಕಟ್ಟಡದಲ್ಲಿ 32, ಇತರ ಕಟ್ಟಡದಲ್ಲಿ 138 ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.
ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ ಸೌಲಭ್ಯಗಳ ಕೊರತೆ ನೀಗಿಸುವಲ್ಲಿ ಸರ್ಕಾರದ ಕ್ರಮಗಳ ಬಗ್ಗೆ ಕೇಳಿದ ಪ್ರಶ್ನೆಗೆ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಉತ್ತರಿಸಿ, ಜಿಲ್ಲೆಯಲ್ಲಿ ಪ್ರಸ್ತುತ 18 ಮೆಟ್ರಿಕ್ ಪೂರ್ವ ಮತ್ತು 27 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, 4,581 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ. ಇತರ ಜಿಲ್ಲೆಗಳಿಂದ ವ್ಯಾಸಂಗಕ್ಕೆ ದಾಖಲಾಗಿರುವ ವಿದ್ಯಾರ್ಥಿಗಳನ್ನು ಮನಗಂಡು ಸರ್ಕಾರದ ಆದೇಶದಂತೆ ಮೆಟ್ರಿಕ್ ನಂತರದ ವಸತಿ ನಿಲಯವನ್ನು ಉಡುಪಿ ಜಿಲ್ಲಾ ಕೇಂದ್ರಕ್ಕೆ 2 ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಮಂಜೂರು ಮಾಡಿದೆ. ವಿದ್ಯಾರ್ಥಿ ನಿಲಯವನ್ನು ಪ್ರಾರಂಭಿಸಿ ಪ್ರವೇಶಾತಿ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ನೂತನ ವ್ಯವಸ್ಥೆಯ ಸುರಕ್ಷತೆ ಬಗ್ಗೆ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಉತ್ತರಿಸಿ, ಮೆಸ್ಕಾಂ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ವ್ಯವಸ್ಥೆ ಸುಧಾರಣೆಯಡಿ ಹೆಚ್ಚುವರಿ ಪರಿವರ್ತಕಗಳ ಅಳವಡಿಕೆ ಅಪಾಯಕಾರಿ ತಂತಿಗಳ ಬದಲಾವಣೆ ಮುಂತಾದವುಗಳನ್ನು ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೇಡಿಕೆಗೆ ಅನುಗುಣವಾಗಿ ಕೈಗೊಳ್ಳಲಾಗುವುದು. ಪಡುಬಿದ್ರಿ, ಮಣಿಪಾಲ, ಶಿರ್ವ ಶಾಖಾ ವ್ಯಾಪ್ತಿಯಲ್ಲಿ ರಿ– ಕಂಡಕ್ಟರಿಂಗ್, ಪರಿವರ್ತಕದ ಉನ್ನತೀಕರಿಸಿದ ಕಾಮಗಾರಿ ಪೂರ್ಣಗೊಂಡಿದ್ದು, ಕಟಪಾಡಿ, ಶಿರ್ವದಲ್ಲಿರುವ ರಿ– ಕಂಡಕ್ಟರಿಂಗ್ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.