ADVERTISEMENT

ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್‌ ನಿರಾಕರಣೆ|ಮಾಜಿ ಶಾಸಕ ರಘುಪತಿ ಭಟ್‌ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 12 ಮೇ 2024, 15:25 IST
Last Updated 12 ಮೇ 2024, 15:25 IST
ರಘುಪತಿ ಭಟ್‌, ಮಾಜಿ ಶಾಸಕ
ರಘುಪತಿ ಭಟ್‌, ಮಾಜಿ ಶಾಸಕ   

ಉಡುಪಿ: ವಿಧಾನ ಪರಿಷತ್ ಚುನಾವಣೆಗೆ ಪದವೀಧರರ ಕ್ಷೇತ್ರದಿಂದ ಟಿಕೆಟ್ ದೊರೆಯದ ಕಾರಣಕ್ಕೆ ಮಾಜಿ ಶಾಸಕ ರಘುಪತಿ ಭಟ್‌ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.

‘ಶಿಕ್ಷಕರ ಕ್ಷೇತ್ರ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ಹಾಗೂ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ನಾಲ್ಕು ದಶಕಗಳಿಂದ ಕರಾವಳಿ ಭಾಗಕ್ಕೆ ಟಿಕೆಟ್‌ ನೀಡಲಾಗುತ್ತಿತ್ತು. ಬಿಜೆಪಿಯ ಈ ಸಂಪ್ರದಾಯವನ್ನು ಈ ಬಾರಿ ಮುರಿಯಲಾಗಿದ್ದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದಂತಾಗಿದೆ. ಪ್ರಸ್ತುತ ಸ್ಥಿತಿಯಲ್ಲಿ ಬಿಜೆಪಿಯ ನಿಲುವಿನಿಂದ ವಿಚಲಿತನಾಗಿದ್ದೇನೆ’ ಎಂದು ನೋವು ತೋಡಿಕೊಂಡಿದ್ದಾರೆ.

1994ರಿಂದಲೂ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ಕೆಲಸ ಮಾಡಿದ್ದೇನೆ. ವಿಧಾನಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಹಿತಿ ನೀಡದೆ ಅಭ್ಯರ್ಥಿಯನ್ನು ಬದಲಿಸಲಾಯಿತು.

ADVERTISEMENT

‘ಟಿಕೆಟ್‌ ನಿರಾಕರಿಸಿದ ಸಂದರ್ಭದಲ್ಲಿ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಅದರಂತೆ ಪದವೀಧರರ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಂಡು ಅತಿ ಹೆಚ್ಚು ಸದಸ್ಯರನ್ನು ನೋಂದಾಯಿಸಿದ್ದೆ. ಪಕ್ಷ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಜವಾಬ್ದಾರಿಯನ್ನು ನೀಡಿತ್ತು. 40 ದಿನಗಳ ಕಾಲ ಶಿವಮೊಗ್ಗದಲ್ಲಿಯೇ ಉಳಿದು ಅದನ್ನು ನಿರ್ವಹಿಸಿದ್ದೇನೆ. ಇದೀಗ ವಿಧಾನ ಪರಿಷತ್ ಟಿಕೆಟ್ ನಿರಾಕರಿಸಲಾಗಿದೆ. ಇದಕ್ಕೆ ನ್ಯಾಯ ಕೊಡುವವರು ಯಾರು’ ಎಂದು ರಘುಪತಿ ಭಟ್‌ ಪ್ರಶ್ನಿಸಿದ್ದಾರೆ.

ಪಕ್ಷ ತೆಗೆದುಕೊಂಡಿರುವ ನಿಲುವಿನಿಂದ ವಿಚಲಿತನಾಗಿದ್ದು ಪಕ್ಷದ ಸಾಮಾನ್ಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಚಿಂತಿಸುವ, ಚರ್ಚಿಸುವ ಕಾಲ ಇದಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.