ಉಡುಪಿ: ಬಿಜೆಪಿ ಮುಖಂಡ ಶಿವಪ್ರಸಾದ್ ಪತ್ನಿ ರಕ್ಷಾ ಸಂಶಯಾಶಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.
ಸೋಮವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ‘ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ರಕ್ಷಾ ಮೃತಪಟ್ಟಿದ್ದಾರೆ. ರಕ್ಷಾ ಅವರ ಕೋವಿಡ್ ಪರೀಕ್ಷಾ ವರದಿಯಲ್ಲೂ ದಿನಾಂಕ ವ್ಯತ್ಯಾಸವಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಎಂದುಸಂಬಂಧಿಗಳು ದೂರಿದ್ದಾರೆ. ಈ ವಿಚಾರಗಳನ್ನು ಸೋಮವಾರ ಎಸ್ಪಿ ಕಚೇರಿಯಲ್ಲಿ ಗೃಹ ಸಚಿವರ ಜತೆಗೆ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ಚರ್ಚಿಸಲಾಗಿದ್ದು, ಸಚಿವರು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ’ ಎಂದು ತಿಳಿಸಿದರು.
ವೈದ್ಯರ ನಿರ್ಲಕ್ಷ್ಯ ಪ್ರಕರಣದ ತನಿಖೆ ನಡೆಸಲು 7 ವೈದ್ಯರನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಐದು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ರಘುಪತಿ ಭಟ್ ತಿಳಿಸಿದರು.
ಘಟನೆ ವಿವರ:ಆ.21ರಂದುಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದ ರಕ್ಷಾ (26) ದಿಢೀರ್ ಮೃತಪಟ್ಟಿದ್ದರು. ಅವರ ಕೋವಿಡ್ ಪರೀಕ್ಷಾ ವರದಿಯಲ್ಲಿ ದಿನಾಂಕ ಅದಲು ಬದಲಾಗಿತ್ತು. ಇದರಿಂದ ಆಕ್ರೋಶಗೊಂಡ ಕುಟುಂಬದ ಸದಸ್ಯರು ವೈದ್ಯರ ನಿರ್ಲಕ್ಷ್ಯ ಮುಚ್ಚಿಹಾಕಲು ಷಡ್ಯಂತ್ರ ಮಾಡಲಾಗಿದೆ ಎಂದು ಜಿಲ್ಲಾ ಆಸ್ಪತ್ರೆ ಎದುರು ತೀವ್ರ ಪ್ರತಿಭಟನೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.