ಪ್ರಾಧಿನಿಧಿಕ ಚಿತ್ರ
ಐಸ್ಟಾಕ್ ಚಿತ್ರ
ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಪೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಆದೇಶಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮಂಜುನಾಥ್ ಎನ್. ಅಪರಾಧಿ. ಆತನಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹ 25 ಸಾವಿರ ದಂಡ ವಿಧಿಸಿದ್ದು, ಸಂತ್ರಸ್ತೆಗೆ ಸರ್ಕಾರದಿಂದ ₹ 1.50 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.
ಸಂತ್ರಸ್ತೆಯ ಅಣ್ಣನ ಸ್ನೇಹಿತನಾದ ಆರೋಪಿಯು, ಬಾಲಕಿಯನ್ನು ಫೋನ್ನಲ್ಲಿ ಸಂಪರ್ಕಿಸಿ, ಪ್ರೀತಿಸುತ್ತೇನೆ ಎಂದು ನಂಬಿಸಿದ್ದನು. ನಂತರ ಪ್ರೀತಿಯ ಬಗ್ಗೆ ಅಣ್ಣನಿಗೆ ತಿಳಿಸುವುದಾಗಿ ಬೆದರಿಸುತ್ತಿದ್ದ. ಸಂತ್ರಸ್ತೆ ತನ್ನ ಅಜ್ಜಿ ಮನೆಯಾದ ಗದಗ ಜಿಲ್ಲೆಗೆ ತೆರಳಿದ್ದಾಗ, ಆರೋಪಿಯೂ ಆಕೆಯನ್ನು ಬಲವಂತದಿಂದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ದೈಹಿಕ ಸಂಪರ್ಕ ಬೆಳೆಸಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ, ವಿಡಿಯೊವನ್ನು ಅಣ್ಣ ಹಾಗೂ ಮನೆಯವರಿಗೆ ಕಳುಹಿಸುವುದಾಗಿ ಬೆದರಿಸಿದ್ದಾನೆ.
ವಿಷಯ ತಿಳಿದ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಅಂದಿನ ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲಗುಜ್ಜಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ವಕೀಲ ಜಯರಾಂ ಶೆಟ್ಟಿ ಹಾಗೂ ಪೋಕ್ಸೊ ನ್ಯಾಯಾಲಯದ ವಿಶೇಷ ಸರ್ಕಾರಿ ವಕೀಲ ವೈ.ಟಿ ರಾಘವೇಂದ್ರ ವಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.